ರಾಜ್ಯದ ಪೊಲೀಸ್ ಸಿಬ್ಬಂದಿಗೆ ಭರ್ಜರಿ ಉಡುಗೊರೆ…
ಬರ್ತ್ಡೇ, ವಿವಾಹ ವಾರ್ಷಿಕೋತ್ಸವದ ದಿನ ರಜೆ..
ಪೊಲೀಸರಿಗೆ ರಜೆ ನೀಡಲು ಡಿಜಿ ಸಲೀಂ ಖಡಕ್ ಆದೇಶ..
ಒತ್ತಡದ ಕೆಲಸ, ಜೀವನ ಸಮತೋಲನಕ್ಕೆ ಸಹಾಯ..
ಬೆಂಗಳೂರು : ಕರ್ನಾಟಕ ಸರ್ಕಾರವು ಪೊಲೀಸ್ ಸಿಬ್ಬಂದಿಗಳ ಕೆಲಸದ ಒತ್ತಡವನ್ನು ಕಡಿಮೆ ಮಾಡಲು ಮತ್ತು ಅವರ ಕೌಟುಂಬಿಕ ಜೀವನಕ್ಕೆ ಪ್ರಾಮುಖ್ಯತೆ ನೀಡಲು ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ದಿನದಂದು ಸಾಂದರ್ಭಿಕ ರಜೆ ಮಂಜೂರು ಮಾಡಿ ಮಹತ್ವದ ಆದೇಶ ಹೊರಡಿಸಿದೆ. ದಿನದ 24 ಗಂಟೆಯೂ ಕರ್ತವ್ಯದಲ್ಲಿರುವ ಪೊಲೀಸರು ತಮ್ಮ ವೈಯಕ್ತಿಕ ಮತ್ತು ಕೌಟುಂಬಿಕ ಸಂಭ್ರಮಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂಬ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪೊಲೀಸ್ ಇಲಾಖೆಯ ಕೆಲಸದ ದಕ್ಷತೆಯನ್ನು ಹೆಚ್ಚಿಸಲು ಮತ್ತು ಸಿಬ್ಬಂದಿಗಳ ಮಾನಸಿಕ ಆರೋಗ್ಯ ಕಾಪಾಡಲು ಸರ್ಕಾರ ಈ “ಸಿಹಿ ಸುದ್ದಿ” ನೀಡಿದೆ.

ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಜಾರಿಯನ್ನು ಖಚಿತಪಡಿಸಿಕೊಳ್ಳಲು ಕಠಿಣ ಪರಿಸ್ಥಿತಿಗಳಲ್ಲಿ ಕೆಲಸ ನಿರ್ವಹಿಸುವ ಪೊಲೀಸ್ ಸಿಬ್ಬಂದಿಗಳಿಗೆ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವಗಳಂತಹ ವೈಯಕ್ತಿಕ ಕಾರ್ಯಕ್ರಮಗಳನ್ನು ಆಚರಿಸುವುದು ಬಹಳ ಮಹತ್ವದ್ದಾಗಿದೆ. ಈ ವಿಶೇಷ ದಿನಗಳಲ್ಲಿ ರಜೆ ಪಡೆಯುವುದರಿಂದ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾವನಾತ್ಮಕವಾಗಿ ಪುನಶ್ಚತನಗೊಳ್ಳಲು, ಕುಟುಂಬದೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯಲು ಹಾಗೂ ಕರ್ತವ್ಯ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯವಾಗುತ್ತದೆ. ಇದರಿಂದ ಮನೋಬಲ ವೃದ್ಧಿಯಾಗುತ್ತದೆ. ಒತ್ತಡ ಲಡಿಮೆಯಾಗುತ್ತದೆ ಮತ್ತು ಒಟ್ಟಾರೆ ಕೆಲಸದ ತೃಪ್ತಿ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ. ಈ ಮಾನವೀಯ ಕಾರ್ಯವು ಅವರ ತ್ಯಾಗಗಳನ್ನು ಗುರುತಿಸುವುದರ ಜೊತೆಗೆ ನಿಷ್ಠೆಯನ್ನು ಬೆಳೆಸುತ್ತದೆ ಮತ್ತು ಪೊಲೀಸ್ ಪಡೆಯ ಬದ್ಧತೆಯನ್ನು ಬಲಪಡಿಸಿ, ಸೇವೆಯಲ್ಲಿ ಉತ್ತಮ ಶಿಸ್ತು ಮತ್ತು ಕಾರ್ಯಕ್ಷಮತೆಗೆ ಸಹಕಾರಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ರಜೆ ಕೋರಿದಲ್ಲಿ, ತಪ್ಪದೆ ರಜೆ ಮಂಜೂರು ಮಾಡಲು ಎಲ್ಲಾ ಘಟಕಾಧಿಕಾರಿಗಳಿಗೆ ನಿರ್ದೇಶಿಸಿದೆ ಎಂದು ಡಿಜಿ-ಐಜಿಪಿ ಡಾ.ಸಲೀಂ ಈ ಆದೇಶ ಹೊರಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

