ಬೆಂಗಳೂರು: ಕಳೆದ 3 ದಿನಗಳ ಹಿಂದೆ ಕಾಣೆಯಾಗಿದ್ದ 14 ವರ್ಷದ ಬಾಲಕ, ಬೆಂಗಳೂರು ದಕ್ಷಿಣ ತಾಲೂಕಿನ ತಾತಗುಣಿ ಸಮೀಪ ಶವವಾಗಿ ಪತ್ತೆಯಾಗಿದ್ದಾನೆ. ಚಾಮರಾಜನಗರ ಜಿಲ್ಲೆಯ ರಜನಿಕಾಂತ್ ಎಂಬುವವರ ಪುತ್ರ ಪ್ರೀತಮ್ (14) ಮೃತ ಬಾಲಕ.ಈ ದುರ್ಘಟನೆಗೆ ಜಲಮಂಡಳಿಯ ನಿರ್ಲಕ್ಷ್ಯವೇ ಕಾರಣ. ಪೈಪ್ಲೈನ್ಗಾಗಿ ತೆಗೆಯಲಾಗಿದ್ದ ಸಂಪ್ಗಳನ್ನು ಮುಚ್ಚದೆ ಹಾಗೆಯೇ ಬಿಡಲಾಗಿತ್ತು. ಬಾಲಕ ಓಡಾಡುವ ವೇಳೆ ಆಕಸ್ಮಿಕವಾಗಿ ಸಂಪ್ಗೆ ಬಿದ್ದಿರುವ ಸಾಧ್ಯತೆಯಿದೆ ಎಂದು ಎಂದು ಸ್ಥಳೀಯರು ದೂರಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತಾತಗುಣಿಯ ಬಾಡಿಗೆ ಮನೆಯಲ್ಲಿ ರಜನಿಕಾಂತ್ ಕುಟುಂಬ ವಾಸವಿದೆ. ಪ್ರೀತಮ್ 3 ದಿನಗಳ ಹಿಂದೆ ಮನೆಯಿಂದ ಹೊರಗೆ ಹೋದವನು ಮರಳಿ ಬಂದಿರಲಿಲ್ಲ. ಈ ಸಂಬಂಧ ಪೋಷಕರು ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಪೊಲೀಸರು ಮತ್ತು ಸ್ಥಳೀಯರು ಹುಡುಕಾಟ ನಡೆಸುತ್ತಿದ್ದ ವೇಳೆ ಭಾನುವಾರ ಜಲಮಂಡಳಿ ಕಾಮಗಾರಿ ನಡೆಯುತ್ತಿದ್ದ ಸ್ಥಳದ ತೆರೆದ ಸಂಪ್ನಲ್ಲಿ ಶವ ಪತ್ತೆಯಾಗಿದೆ. ಸ್ಥಳಕ್ಕೆ ಧಾವಿಸಿದ ಕಗ್ಗಲೀಪುರ ಪೊಲೀಸರು ಮೃತದೇಹವನ್ನು ಸಂಪ್ನಿಂದ ಹೊರತೆಗೆದು, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆಗೆ ಮುಂದಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

