ಸಿಂಧನೂರು ನಗರದ ಹೊರವಲಯದಲ್ಲಿರುವ ರೈಲ್ವೆ ನಿಲ್ದಾಣದಲ್ಲಿ ಮಂಗಳವಾರ ಸಂಜೆ ಯುವತಿಯೊಬ್ಬರು ರೈಲಿನಡಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನ್ವಿ ತಾಲ್ಲೂಕಿನ ನೀರಮಾನ್ವಿ ಸಮೀಪದ ಸೀಕಲ್ ತಾಂಡಾದ ಸುಮಂಗಲಾ (21) ಮೃತ ಯುವತಿ. ಸುಮಂಗಲಾ ಸಿಂಧನೂರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎದುರು ಇರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದಲ್ಲಿದ್ದು ಬಿ.ಎ ಪ್ರಥಮ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರೆಂದು ತಿಳಿದು ಬಂದಿದೆ. ಈ ಬಗ್ಗೆ ರಾಯಚೂರಿನ ರೈಲ್ವೆ ಇಲಾಖೆಯ ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರು ಬಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಿದ್ದಾರೆ ಎಂದು ಡಿವೈಎಸ್ಪಿ ಚಂದ್ರಶೇಖರ ಜಿ. ನಾಯಕ ತಿಳಿಸಿದರು. ಯುವತಿ ಮಧ್ಯಾಹ್ನದಿಂದಲೂ ರೈಲ್ವೆ ನಿಲ್ದಾಣದಲ್ಲಿಯೇ ಕುಳಿತಿದ್ದರು. ಸಂಜೆ 5 ಗಂಟೆಗೆ ಸಿಂಧನೂರಿನಿಂದ ಬೆಂಗಳೂರಿಗೆ ರೈಲು ಹೊರಡುವ ಸಂದರ್ಭದಲ್ಲಿ ಎರಡನೇ ಪ್ಲಾಟ್ ಫಾರ್ಮ್ ಕಡೆಯಿಂದ ರೈಲುಗೆ ಅಡ್ಡವಾಗಿ ಜಿಗಿದರು ಎಂದು ನಿಲ್ದಾಣದಲ್ಲಿ ಸ್ವಚ್ಛತೆ ಕೆಲಸ ಮಾಡುವ ಕಾರ್ಮಿಕರು ತಿಳಿಸಿದ್ದಾರೆ. ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಡಿವೈಎಸ್ಪಿ, ಶಹರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ವೀರಾರೆಡ್ಡಿ ಎಚ್. ಅವರು ಘಟನಾ ಸ್ಥಳಕ್ಕೆ ತೆರಳಿ, ರೈಲ್ವೆ ಇಲಾಖೆಯ ಸಿಬ್ಬಂದಿಯೊಂದಿಗೆ ಪರಿಶೀಲನೆ ನಡೆಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

