ಹಾವೇರಿ: ಸಿಸಿಟಿವಿ ಕ್ಯಾಮರಾಗಳಿಗೆ ಬಿಳಿ ಬಣ್ಣ ಸಿಂಪಡಣೆ ಮಾಡಿ, ಗ್ಯಾಸ್ ಕಟರ್ ಬಳಸಿ ಎಟಿಎಂ ಯಂತ್ರ ಕೊರೆದು 4.66 ಲಕ್ಷ ರೂ. ಕದ್ದು ಪರಾರಿಯಾಗಿರುವ ಘಟನೆ ಜಿಲ್ಲೆಯ ಶಿಗ್ಗಾಂವಿ ತಾಲೂಕು ಹನುಮರಳ್ಳಿ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಗ್ರಾಮದ ಹೊರವಲಯದಲ್ಲಿರುವ ಯೂನಿಯನ್ ಬ್ಯಾಂಕ್ ಶಾಖೆಯ ಎಟಿಎಂ ಯಂತ್ರ ಹಾನಿಗೊಳಿಸಿ ಹಣ ದೋಚಲಾಗಿದೆ. ಸಿಸಿಟಿವಿ ಕ್ಯಾಮರಾದಲ್ಲಿ ನಾಲ್ವರು ಸೆರೆಯಾಗಿದ್ದಾರೆ. ಆದರೆ, ಅವರು ಮುಖಕ್ಕೆ ಮಾಸ್ಕ್ ಧರಿಸಿದ್ದರು. 4 ಕ್ಯಾಮರಾಗಳಿಗೆ ಬಿಳಿ ಬಣ್ಣ ಸ್ಪ್ರೇ ಮಾಡಿ, ಕಳವು ಮಾಡಿದ್ದಾರೆ. ಸ್ಥಳಕ್ಕೆ ಡಿವೈಎಸ್ಪಿ ಗುರುಶಾಂತಪ್ಪ ಹಾಗೂ ಇತರ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು. ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ತಪಾಸಣೆ ನಡೆಸಿದರು. ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತ್ತೆಗೆ ತಂಡ ರಚನೆ: ಇತ್ತೀಚೆಗೆ ಬ್ಯಾಂಕ್ ಅಧಿಕಾರಿಗಳ ಸಭೆ ನಡೆಸಿ ಎಲ್ಲ ಬ್ಯಾಂಕ್ ಮತ್ತು ಎಟಿಎಂಗಳಲ್ಲಿ ಅಗತ್ಯ ಭದ್ರತೆ ಕೈಗೊಳ್ಳಲು ಸೂಚಿಸಲಾಗಿತ್ತು. ಭದ್ರತಾ ಸಿಬ್ಬಂದಿ ನೇಮಕ, ಸಿಸಿಟಿವಿ ಕ್ಯಾಮರಾ ಹಾಗೂ ಅಲಾರಾಂ ಅಳವಡಿಸಲು ಸೂಚಿಸಲಾಗಿತ್ತು. ಆದರೂ ಕೆಲವರು ಈ ಬಗ್ಗೆ ನಿರ್ಲಕ್ಷೃ ತೋರಿದ್ದಾರೆ. ಕಳ್ಳತನವಾದ ಎಟಿಎಂನಲ್ಲಿ ಅಲಾರಾಂ ಇರಲಿಲ್ಲ. ಕಳ್ಳರ ಪತ್ತೆಗೆ ತಂಡ ರಚಿಸಲಾಗಿದೆ ಎಂದು ಎಸ್ಪಿ ಯಶೋಧಾ ವಂಟಗೋಡಿ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

