ಬೆಂಗಳೂರು: ಇಲ್ಲಿನ ಸುಬ್ರಹಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಸದ ಗುಡ್ಡೆಯಲ್ಲಿ ನವಜಾತು ಶಿಶು ಮೃತಪಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ನಿನ್ನೆ ಸಂಜೆ 7.50 ರ ಸುಮಾರಿನಲ್ಲಿ ಉತ್ತರಹಳ್ಳಿ ಪೂರ್ಣಪ್ರಜ್ಞಾ ಲೇಔಟ್ ಅಪಾರ್ಟ್ಮೆಂಟ್ ಹಿಂಭಾಗದ ಖಾಲಿ ಜಾಗದ ಮೈದಾನದಲ್ಲಿ ಹುಡುಗರು ಆಟವಾಡುತ್ತಿದ್ದರು. ಆ ಸಂದರ್ಭದಲ್ಲಿ ಮೈದಾನಲ್ಲಿದ್ದ ಕಸದ ಗುಡ್ಡೆ ಬಳಿ ಮಗು ಮೃತಪಟ್ಟಿರುವ ಸ್ಥಿತಿಯನ್ನು ನೋಡಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ತಕ್ಷಣ ಪೊಲೀಸರು ಸ್ಥಳಕ್ಕೆ ಬಂದು ನೋಡಿದಾಗ ನವಜಾತ ಶಿಶು ಮೃತಪಟ್ಟಿರುವುದು ಕಂಡು ಬಂದಿದೆ. ನವಜಾತ ಶಿಶುವನ್ನು ಬಿಸಾಡಿ ಹೋಗಿರುವ ಪೋಷಕರನ್ನು ಪತ್ತೆ ಮಾಡಿ ಅವರುಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಯುವಕನೋರ್ವ ಸುಬ್ರಹಣ್ಯಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನವಜಾತ ಶಿಶುವಿನ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿ ಘಟನಾ ಸ್ಥಳದ ಸುತ್ತಮುತ್ತಲಿನ ರಸ್ತೆಗಳಲ್ಲಿರುವ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

