ಬೆಳಗಾವಿ: ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದಲ್ಲಿ ನಡೆದ ಭೀಕರ ಹತ್ಯೆ ಪ್ರಕರಣದಲ್ಲಿ ಪೊಲೀಸರಿಗೆ ಸ್ಫೋಟಕ ಸಾಕ್ಷ್ಯಗಳು ದೊರೆತಿವೆ. ಈ ಪ್ರಕರಣದಲ್ಲಿ ಕೊಲೆಯಾದ ವ್ಯಕ್ತಿಯೇ ಪತ್ನಿ ಹಾಗೂ ಪುತ್ರ ಸಂಚು ರೂಪಿಸಿ ಕೃತ್ಯಕ್ಕೆ ಸಾಥ್ ನೀಡಿರುವುದು ತನಿಖೆಯಲ್ಲಿ ಬಯಲಾಗಿದೆ. ಫೆಬ್ರವರಿ 20ರಂದು ಹಿರೇನಂದಿಹಳ್ಳಿ ಗ್ರಾಮದ ಹೊರವಲಯದ ಜಮೀನಿನಲ್ಲಿ ಪತ್ತೆಯಾದ ಮೃತದೇಹವನ್ನು ನಂತರ ಕಲ್ಮೇಶ್ ಕೋಟಿ ಎಂದು ಗುರುತಿಸಲಾಗಿತ್ತು. ತುಮಕೂರಿನಲ್ಲಿ ಹೋಮ್ ಕೇರ್ ಉದ್ಯೋಗದಲ್ಲಿ ತೊಡಗಿದ್ದ ಕಲ್ಮೇಶ್ ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಊರಿಗೆ ಬಂದಿದ್ದ ವೇಳೆ ಈ ದುಷ್ಕೃತ್ಯ ನಡೆದಿದೆ. ‘ಪಾರ್ಟಿ ಮಾಡೋಣ’ ಎಂದು ನಂಬಿಸಿ ಜಮೀನಿಗೆ ಕರೆದೊಯ್ದ ಬಳಿಕ ಆರೋಪಿಗಳು ಹಲ್ಲೆ ನಡೆಸಿ ಅಮಾನುಷವಾಗಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆಯ ಬಳಿಕ ಆರೋಪಿಗಳಲ್ಲಿ ಒಬ್ಬ ತನ್ನ ಅಕ್ಕನಿಗೆ ಕರೆ ಮಾಡಿ ಮಾಹಿತಿ ನೀಡಿದ್ದ ಎಂಬುದೂ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ತನಿಖೆ ಮುಂದುವರೆದಂತೆ ಕೊಲೆಯ ಹಿಂದಿನ ಪ್ರಮುಖ ಕಾರಣ ಆಸ್ತಿ ವಿವಾದ ಎಂಬುದು ಸ್ಪಷ್ಟವಾಗಿದೆ. 12 ವರ್ಷಗಳ ದಾಂಪತ್ಯ ಕಲಹದ ಹಿನ್ನೆಲೆಯಲ್ಲಿ ಪತ್ನಿ ಕಸ್ತೂರಿ ಕೋಟಿ ಮತ್ತು ಪುತ್ರ ಕಿರಣ್ ಕೋಟಿ ಸಂಚು ರೂಪಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

