ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ಪಟಾಕಿ ತಯಾರಿಕಾ ಘಟಕದಲ್ಲಿ ಶನಿವಾರ ಸಂಭವಿಸಿದ್ದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಸಮ್ರಾಲಕೋಟ ಮಂಡಲದ ವೆಟ್ಲಪಾಲೆಂನಲ್ಲಿ ಶನಿವಾರ ಒಂಬತ್ತು ಮಹಿಳೆಯರು ಸೇರಿ 20 ಮಂದಿ ಮೃತಪಟ್ಟಿದ್ದರು. ಗಂಭೀರ ಸ್ಥಿತಿಗೆ ತಲುಪಿದ್ದ ಒಂಬತ್ತು ಮಂದಿಯಲ್ಲಿ ಮತ್ತೊಬ್ಬರು ಕಾಕಿನಾಡ ಆಸ್ಪತ್ರೆಯಲ್ಲಿ ಶನಿವಾರ ರಾತ್ರಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಮೃತರಲ್ಲಿ ಸೂರ್ಯಶ್ರೀ ಫೈರ್ ವರ್ಕ್ಸ್ ಘಟಕದ ಮಾಲೀಕ ಅಡಬಾಲ ಶ್ರೀನಿವಾಸ್ ಕೂಡ ಸೇರಿದ್ದಾರೆ. ಮೃತರ ಗುರುತು ಪತ್ತೆಹಚ್ಚಿ, ಮರಣೋತ್ತರ ಪರೀಕ್ಷೆ ನಂತರ ವಾರಸುದಾರರಿಗೆ ಒಪ್ಪಿಸಲಾಗಿದೆ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಜೆ.ನರಸಿಂಹ ನಾಯಕ್ ತಿಳಿಸಿದ್ದಾರೆ. ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಕಾಕಿನಾಡ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ‘ಎಂಟು ಮಂದಿಯಷ್ಟೇ ಕೆಲಸ ಮಾಡುವ ಸ್ಥಳದಲ್ಲಿ 31 ಮಂದಿ ಕೆಲಸ ನಿರ್ವಹಿಸುತ್ತಿದ್ದರು. ಈ ರೀತಿಯ ಘಟನೆಗಳನ್ನು ನಿಯಂತ್ರಿಸಲು ಬಿಗಿ ಕ್ರಮ ಜರುಗಿಸಲಾಗುವುದು’ ಎಂದು ಅವರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

