ಬೆಂಗಳೂರು: ಗುತ್ತಿಗೆದಾರರೊಬ್ಬರಿಂದ ₹10,000 ಲಂಚ ಪಡೆಯುತ್ತಿದ್ದ ವೇಳೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಪಾಲಿಕೆಯ ಸ್ಯಾನಿಟರಿ ಸೂಪರ್ವೈಸರ್ ಒಬ್ಬರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.ನಗರದ ಕಾವಲ್ ಬೈರಸಂದ್ರದ ವ್ಯಾಪ್ತಿಯಲ್ಲಿ ಗುತ್ತಿಗೆದಾರ ಅಬ್ದುಲ್ ರೆಹಮಾನ್ ಅವರು ರಸ್ತೆ ದುರಸ್ತಿ ಕಾರ್ಯ ನಡೆಸುತ್ತಿದ್ದರು. ಈ ವೇಳೆ ಅಲ್ಲಿದ್ದ ಚಿಪ್ಪಿಂಗ್ ಯಂತ್ರವನ್ನು ನಗರ ಪಾಲಿಕೆಯ ಆರೋಗ್ಯ ವಿಭಾಗದ ಸ್ಯಾನಿಟರಿ ಸೂಪರ್ವೈಸರ್ ಎಂ.ನಾಗರಾಜ ಅವರು ಅನಧಿಕೃತವಾಗಿ ಜಪ್ತಿ ಮಾಡಿದ್ದರು ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ. ಯಂತ್ರವನ್ನು ಬಿಡುಗಡೆ ಮಾಡಲು ₹10,000 ಲಂಚ ನೀಡುವಂತೆ ನಾಗರಾಜ ಅವರು ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಅಬ್ದುಲ್ ಅವರು ನೀಡಿದ್ದ ದೂರಿನ ಆಧಾರದಲ್ಲಿ ಕಾರ್ಯಾಚರಣೆ ರೂಪಿಸಲಾಗಿತ್ತು. ಅದರಂತೆ ಅಬ್ದುಲ್ ಅವರು ನಾಗರಾಜ ಅವರಿಗೆ ಗುರುವಾರ ಹಣ ನೀಡಿದ್ದರು. ಈ ವೇಳೆ ದಾಳಿ ನಡೆಸಿ, ಆರೋಪಿಯನ್ನು ಬಂಧಿಸಲಾಯಿತು ಎಂದು ಮಾಹಿತಿ ನೀಡಿದ್ದಾರೆ. ಲೋಕಾಯುಕ್ತ ಎಸ್ಪಿ ಶಿವಪ್ರಕಾಶ್ ದೇವರಾಜ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಲಂಚದ ಹಣವನ್ನು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

