ಬೆಂಗಳೂರು: ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸದೆ ಶೇಷಾದ್ರಿ ಜಂಕ್ಷನ್ ಬಳಿ ರಸ್ತೆತಡೆ ನಡೆಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮೂವರ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಎಸ್ಐ ಭೀಮಸೇನ ಘಾಟಗೆ ಅವರ ದೂರಿನ ಮೇರೆಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಶಿವಮೊಗ್ಗ, ಸಂಘಟನಾ ಸಂಚಾಲಕರಾದ ಹನುಮಂತಪ್ಪ ಕಾಕರಗಲ್, ಎಸ್.ಫಕೀರಪ್ಪ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಹೈಕೋರ್ಟ್ ಆದೇಶದ ಪ್ರಕಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಮಾತ್ರ ಪ್ರತಿಭಟನೆ ನಡೆಸಲು ಅವಕಾಶ ನೀಡಲಾಗಿದೆ. ಮಾರ್ಚ್ 11ರಂದು ದಲಿತರಿಗೆ ಮೂಲಸೌಲಭ್ಯ ಒದಗಿಸುವಂತೆ ಆಗ್ರಹಿಸಿ ಎಂ.ಗುರುಮೂರ್ತಿ ಶಿವಮೊಗ್ಗ ನೇತೃತ್ವದಲ್ಲಿ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಬೇಕಿತ್ತು. ಆದರೆ, ಪ್ರತಿಭಟನಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ, ಶೇಷಾದ್ರಿ ಜಂಕ್ಷನ್ ಬಳಿ ಬಂದು ರಸ್ತೆತಡೆ ನಡೆಸಿ, ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದರು ಎಂದು ಪಿಎಸ್ಐ ದೂರಿನಲ್ಲಿ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

