ಮಹಿಳೆಯ ಚಿನ್ನದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾದ ಆರೋಪಿಯನ್ನು ವಿಜಯಪುರ ಟೌನ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರಿನ ಡಿ.ಜೆ ಹಳ್ಳಿಯ ಆರೀಫ್ ಖಾನ್ (25) ಬಂಧಿತ. ಮಾರ್ಚ್ 17ರಂದು ಪದ್ಮಾವತಿ ಎಂಬುವರ ₹5 ಲಕ್ಷ ಬೆಲೆಬಾಳುವ 55 ಗ್ರಾಂ ಚಿನ್ನದ ಮಾಂಗಲ್ಯ ಸರವನ್ನು ಬೈಕ್ನಲ್ಲಿ ಬಂದ ಆರೋಪಿ ಕದ್ದು ಪರಾರಿಯಾಗಿದ್ದ. ಚಿಕ್ಕಬಳ್ಳಾಪುರ-ದೇವನಹಳ್ಳಿಯ ರಾಷ್ಟ್ರೀಯ ಹೆದ್ದಾರಿ ಸಮೀಪದ ಮುನೇಶ್ವರಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಲು ಹೆದ್ದಾರಿ ಸಂಪರ್ಕಿಸುವ ಸರ್ವಿಸ್ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಪದ್ಮಾವತಿ ಅವರನ್ನು ಆರೋಪಿ ಹಿಂದಿನಿಂದ ಬೈಕ್ನಲ್ಲಿ ಬೆನ್ನತ್ತಿದ್ದ. ಕುತ್ತಿಗೆಗೆ ಕೈ ಹಾಕಿ ಕತ್ತಿನಲ್ಲಿದ್ದ ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದ. ಪ್ರಕರಣದ ತನಿಖೆಗೆ ವಿಶೇಷ ತಂಡ ರಚಿಸಲಾಗಿತ್ತು. ಶುಕ್ರವಾರ ಆರೋಪಿಯಿಂದ ಚಿನ್ನದ ಮಾಂಗಲ್ಯ ಸರ ಮತ್ತು ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ವಿಜಯಪುರ ಟೌನ್ ಪೊಲೀಸರು ವಶಪಡಿಸಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

