ಬಿರಿಯಾನಿ ಕನಸು ದುರಂತದಲ್ಲಿ ಅಂತ್ಯ: ಲಾರಿ ಡಿಕ್ಕಿಗೆ ಮೂವರು ಬಲಿ!
ಊಟಕ್ಕೆ ಹೊರಟ ಯುವಕರಿಗೆ ಮರಣದ ಹೊಡೆತ: ಭೀಕರ ಅಪಘಾತದಲ್ಲಿ ಮೂವರು ಸಾವು
ಕುದೂರು(ರಾಮನಗರ): ಮುಂಜಾನೆ ಬಿರಿಯಾನಿ ಸವಿಯಲು ಬುಲೆಟ್ ಬೈಕಿನಲ್ಲಿ ಹೊರಟಿದ್ದ ಮೂವರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಮರೂರು ಹ್ಯಾಂಡ್ ಪೋಸ್ಟ್ ಬಳಿ ಶನಿವಾರ ಮುಂಜಾನೆ ಸಂಭವಿಸಿದೆ. ಬೆಂಗಳೂರಿನ ಪ್ರತಿಷ್ಠಿತ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾದ ದಾವಣಗೆರೆಯ ಮನೋಜ್ (21), ಬೇಲೂರಿನ ಅಭಿಲಾಷ್ (21), ರಾಯಚೂರಿನ ನವೀನ್ (21) ಮೃತರು. ಮುಂಜಾನೆ 4 ಗಂಟೆ ಸುಮಾರಿಗೆ ಕುಣಿಗಲ್ಗೆ ಬಿರಿಯಾನಿ ತಿನ್ನಲು ಬುಲೆಟ್ ಬೈಕ್ನಲ್ಲಿ ತೆರಳುತ್ತಿದ್ದಾಗ, ಮರೂರು ಹ್ಯಾಂಡ್ ಪೋಸ್ಟ್ ಬಳಿ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಆನೇಕಲ್ ಕಡೆಗೆ ಹೋಗುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ನವೀನ್ ಅವರನ್ನು ನೆಲಮಂಗಲದ ಸರ್ಕಾರಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. ಕುದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

