ಗಂಗಾವತಿ: ತಾಲ್ಲೂಕಿನ ವಡ್ಡರಹಟ್ಟಿ ಗ್ರಾಮದಲ್ಲಿ ಪಡಿತರ ಅಕ್ಕಿ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದುದರ ಕುರಿತು ಕನ್ನಡಪರ ಸಂಘಟನೆಗಳ ಮುಖಂಡರು ನೀಡಿದ ಖಚಿತ ಮಾಹಿತಿ ಮೇರೆಗೆ ಶನಿವಾರ ದಾಳಿ ನಡೆಸಿದ ಆಹಾರ ಇಲಾಖೆ ಅಧಿಕಾರಿಗಳು, ಪಡಿತರ ಅಕ್ಕಿ ತುಂಬಿದ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಬೂದಗುಂಪ ಕ್ರಾಸ್ನಿಂದ ಗಂಗಾವತಿ ಮಾರ್ಗವಾಗಿ ಬರುತ್ತಿದ್ದ ಲಾರಿ ತಡೆದು ವಿಚಾರಣೆ ನಡೆಸಿ, ಅಕ್ಕಿ ಪರಿಶೀಲಿಸಿದ ಸಮಯದಲ್ಲಿ ಪಡಿತರ ಅಕ್ಕಿ ಎಂದು ಸಾಬೀತಾಗಿದೆ. ಕೂಡಲೇ ಆಹಾರ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಹಾರ ಇಲಾಖೆ ಅಧಿಕಾರಿಗಳು ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಅದರಲ್ಲಿ 35 ಟನ್ ಅಕ್ಕಿ ಪತ್ತೆಯಾಗಿದೆ. ನಂತರ ಕನ್ನಡ ಪರ ಸಂಘಟನೆಯವರು ಪ್ರಕರಣ ದಾಖಲಿಸಲು ಒತ್ತಾಯಿಸಿದ ಹಿನ್ನೆಲೆಯಲ್ಲಿ ಇಲಾಖೆ ಅಧಿಕಾರಿಗಳು, ನಗರಠಾಣೆಯಲ್ಲಿ ದೂರು ನೀಡಿದ್ದಾರೆ. ಸರ್ಕಾರಿ ಗೋದಾಮಿನಲ್ಲಿ ಅಕ್ಕಿ ಸಂಗ್ರಹ ಮಾಡಲಾಗಿದ್ದು, ಅಧಿಕಾರಿಗಳು ಪಡಿತರ ಅಕ್ಕಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

