ಶಿವಮೊಗ್ಗ: ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ಸೊರಬ ತಾಲೂಕಿನ ಹೊಡಬಟ್ಟೆ ಗ್ರಾಮದಲ್ಲಿ ನಡೆದಿದೆ. ಶ್ವೇತಾ (30) ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾರೆ. ಮಹಿಳೆ ಸ್ಟಾಫ್ ನರ್ಸ್ ಆಗಿ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಮಾರ್ಚ್ 29 ರಂದು ಮನೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಸಾಗರದ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಬಳಿಕ ಮಣಿಪಾಲ್ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇದೀಗ ಮೃತಪಟ್ಟಿದ್ದಾರೆ. ಈ ನಡುವೆ ಅತ್ತೆ, ಮಾವನ ಕಿರುಕುಳದಿಂದ ಮಗಳು ಸಾವನ್ನಪ್ಪಿದ್ದಾಳೆ ಎಂದು ಶ್ವೇತಾ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಗಳಿಗೆ ಮನೆ ಬಿಟ್ಟು ಹೋಗುವಂತೆ ಚಿತ್ರಹಿಂಸೆ ನೀಡುತ್ತಿದ್ದರು. ಇದೇ ಕಾರಣಕ್ಕೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಸಂಬಂಧ ಸೊರಬ ಠಾಣೆಯಲ್ಲಿ 6 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಗಳಾದ ಅತ್ತೆ ಜಾನಕಿ, ಮಾವ ಸಣ್ಣಪ್ಪ, ಹಿರಿಯ ಪುತ್ರ ಹೇಮಂತ್, ಸೊಸೆ ದಿವ್ಯಳನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

