ಬೆಂಗಳೂರು: ಸಣ್ಣಪುಟ್ಟ ವಿಚಾರಕ್ಕೆ ಶುರುವಾದ ಕೌಟುಂಬಿಕ ಕಲಹವೊಂದು ಭೀಕರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಸಿಲಿಕಾನ್ ಸಿಟಿಯ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಲತ್ತಹಳ್ಳಿಯಲ್ಲಿ ನಡೆದಿದೆ. ಪತ್ನಿಯೇ ತನ್ನ ತಂದೆ-ತಾಯಿಯೊಂದಿಗೆ ಸೇರಿ ಪತಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಮಂಗಳವಾರ ರಾತ್ರಿ (ಏಪ್ರಿಲ್ 07) ಜರುಗಿದೆ. ತೌಹಿಬ್ ಪಾಷಾ (32) ಕೊಲೆಯಾದ ದುರ್ದೈವಿ. ಪತ್ನಿ ಸೋಹಾನ ಹಾಗೂ ಆಕೆಯ ಪೋಷಕರು ಸೇರಿ ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಮಲ್ಲತ್ತಹಳ್ಳಿಯಲ್ಲಿ ವಾಸವಾಗಿದ್ದ ತೌಹಿಬ್ ಪಾಷಾ ಮತ್ತು ಸೋಹಾನ ದಂಪತಿ ನಡುವೆ ಕಳೆದ ಕೆಲವು ಸಮಯದಿಂದ ಕೌಟುಂಬಿಕ ವಿಚಾರವಾಗಿ ಭಿನ್ನಾಭಿಪ್ರಾಯಗಳಿದ್ದವು. ಮಂಗಳವಾರ ರಾತ್ರಿ ಸುಮಾರು 10 ಗಂಟೆಯ ವೇಳೆಗೆ ದಂಪತಿ ನಡುವೆ ಮತ್ತೆ ಜೋರು ಗಲಾಟೆ ನಡೆದಿದೆ. ಈ ವೇಳೆ ಸಿಟ್ಟಿಗೆದ್ದ ಪತ್ನಿ ಸೋಹಾನ ಮತ್ತು ಮನೆಯಲ್ಲಿದ್ದ ಆಕೆಯ ಪೋಷಕರು ತೌಹಿಬ್ ಪಾಷಾ ಮೇಲೆ ಹಲ್ಲೆ ನಡೆಸಿದ್ದಾರೆ. ಗಲಾಟೆ ವಿಕೋಪಕ್ಕೆ ಹೋದಾಗ ಚಾಕುವಿನಿಂದ ತೌಹಿಬ್ ಅವರ ಎದೆ ಹಾಗೂ ಹೊಟ್ಟೆಯ ಭಾಗಕ್ಕೆ ಬಲವಾಗಿ ಇರಿಯಲಾಗಿದೆ. ತೀವ್ರ ರಕ್ತಸ್ರಾವದಿಂದ ತೌಹಿಬ್ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. “ಸೋಹಾನಳ ತಂದೆ ಮತ್ತು ತಾಯಿ ಈ ಕೊಲೆಯಲ್ಲಿ ನೇರವಾಗಿ ಭಾಗಿಯಾಗಿದ್ದಾರೆ. ಅವರೆಲ್ಲರೂ ಸೇರಿಕೊಂಡೇ ಸಂಚು ರೂಪಿಸಿ ನನ್ನ ಮಗನನ್ನು ಕೊಂದಿದ್ದಾರೆ” ಎಂದು ತೌಹಿಬ್ ಪಾಷಾ ಪೋಷಕರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಮಗನ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ರಕ್ತಸಿಕ್ತ ಚಾಕು ಹಾಗೂ ಇತರೆ ಸಾಕ್ಷ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಪತ್ನಿ ಸೋಹಾನ ಸೇರಿದಂತೆ ಆಕೆಯ ತಂದೆ ಮತ್ತು ತಾಯಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

