ರಾಮಮೂರ್ತಿನಗರದ ಬಳಿ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ಬಿಬಿಎಂ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಿಸಿದ್ದು, ಘಟನೆ ನಡೆದ ಕೆಲವೇ ತಾಸುಗಳಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಚಾಕು ಇರಿತದಿಂದ ಗಾಯಗೊಂಡಿರುವ ವಿದ್ಯಾರ್ಥಿ ಧೀರಜ್ (21) ಎಂಬಾತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳಾದ ಭುವನ್, ಮಿಥುನ್ ಮತ್ತು ಬಾಲಕನನ್ನು ಬಂಧಿಸಲಾಗಿದೆ ಎಂದು ರಾಮಮೂರ್ತಿನಗರ ಠಾಣೆ ಪೊಲೀಸರು ತಿಳಿಸಿದ್ದಾರೆ. ರಾಮಮೂರ್ತಿನಗರ ಸಮೀಪದ ಬಂಜಾರ ಲೇಔಟ್ನ ಧೀರಜ್, ಬೆಳಗಿನ ಜಾವ ಬೈಕ್ನಲ್ಲಿ ಹೊಸಕೋಟೆ ಕಡೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಹೊರ ವರ್ತುಲ ರಸ್ತೆಯಲ್ಲಿ ಆರೋಪಿಗಳು ಬೈಕ್ನಲ್ಲಿ ಎದುರಿನಿಂದ ಬಂದಿದ್ದಾರೆ. ಈ ವಿಚಾರಕ್ಕೆ ಧೀರಜ್ ಹಾಗೂ ಆರೋಪಿಗಳ ನಡುವೆ ವಾಗ್ವಾದ ನಡೆದು ಜಗಳವಾಗಿದೆ. ಬಳಿಕ ಆರೋಪಿಗಳು ಧೀರಜ್ನ ತೊಡೆ ಹಾಗೂ ಬೆನ್ನಿಗೆ ಚಾಕು ಇರಿದು ಬೈಕ್ ಕಿತ್ತುಕೊಂಡು ಪರಾರಿಯಾಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆಯ ವಿಷಯ ತಿಳಿಯುತ್ತಿದ್ದಂತೆ ಬಾಣಸವಾಡಿ ಠಾಣೆ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ ಬೈಕ್ ಜಪ್ತಿ ಮಾಡಲಾಗಿದೆ. ಆರೋಪಿಗಳು ಆರ್.ಎಸ್.ಪಾಳ್ಯದ ಬಳಿಯ ಜಾನಕಿರಾಮ ಲೇಔಟ್ನವರು. ಅವರ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

