ಬೆಂಗಳೂರು ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ವೇಳೆ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಪೊಲೀಸ್ ಅಧಿಕಾರಿ ಸೇರಿದಂತೆ ಆರು ಮಂದಿ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಮೇ 10ರಂದು ಪ್ರಧಾನಿ ಮೋದಿ ನಗರದ ಹೊರವಲಯದಲ್ಲಿರುವ ಆರ್ಟ್ ಆಫ್ ಲೀವಿಂಗ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಕಗ್ಗಲಿಪುರ ಸಮೀಪದ ವಡೇರಹಳ್ಳಿ ಗೇಟ್ ಬಳಿ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದವು. ಪ್ರಧಾನಿ ಭೇಟಿ ಹಿನ್ನೆಲೆ ಭಾರಿ ಭದ್ರತೆ ಏರ್ಪಡಿಸಲಾಗಿದ್ದರೂ, ಮಾರ್ಗದಲ್ಲೇ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವುದು ಭಾರಿ ಸಂಚಲನಕ್ಕೆ ಕಾರಣವಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿದ್ದು, ಎನ್ಐಎ ಅಧಿಕಾರಿಗಳು ಕೂಡ ಸ್ಥಳ ಪರಿಶೀಲನೆ ನಡೆಸಿ ತನಿಖೆ ಆರಂಭಿಸಿದ್ದಾರೆ. ಈ ನಡುವೆ ಕರ್ತವ್ಯಲೋಪ ಆರೋಪದಡಿ ಓರ್ವ ಪಿಎಸ್ಐ, ಓರ್ವ ಎಎಸ್ಐ ಹಾಗೂ ನಾಲ್ವರು ಪೇದೆಗಳನ್ನು ಅಮಾನತುಗೊಳಿಸಿ ಬೆಂಗಳೂರು ದಕ್ಷಿಣ ಎಸ್ಪಿ ಶ್ರೀನಿವಾಸ್ ಗೌಡ ಆದೇಶ ಹೊರಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

