ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್, 80 ಬಡಗಬೆಟ್ಟು ಗ್ರಾಮದ ನೇತಾಜಿನಗರ ನಿವಾಸಿ ಗಣೇಶ್(32) ಎಂಬಾತನನ್ನು ಗೂಂಡಾ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ನೀಡಿದ ವರದಿಯ ಮೇರೆಗೆ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.ಆರೋಪಿ ಗಣೇಶ್ನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲು ಜೂ.1ರಂದು ಆದೇಶ ಹೊರಡಿಸಿದ್ದಾರೆ. ಗಣೇಶ್ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ, ಹಲ್ಲೆ, ಅಕ್ರಮ ಕೂಟ, ಮಹಿಳೆಯರ ಮೇಲೆ ದೌರ್ಜನ್ಯ, ಕಳ್ಳತನ ಸಹಿತ ಒಟ್ಟು 9 ಪ್ರಕರಣಗಳು ದಾಖಲಾಗಿವೆ. ಅವುಗಳ ಪೈಕಿ 3 ಪ್ರಕರಣಗಳಲ್ಲಿ ಖುಲಾಸೆ, 4 ಪ್ರಕರಣಗಳಲ್ಲಿ ನ್ಯಾಯಾಂಗ ವಿಚಾರಣೆ ಹಾಗೂ ಉಳಿದ 2 ಪ್ರಕರಣಗಳು ತನಿಖೆಯಲ್ಲಿವೆ. ಬಂಧಿತ ಆರೋಪಿಯನ್ನು ಕಲಬುರ್ಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶಿಸಲಾಗಿದೆ ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

