ದೇವನಹಳ್ಳಿ: ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ರೌಡಿ ಶೀಟರ್ ಒಬ್ಬನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಅಡ್ಡಗಟ್ಟಿ ತಲವಾರಿನಿಂದ ಕೊಚ್ಚಿ ಬರ್ಬರ ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆಯಲ್ಲಿ ನಡೆದಿದೆ.ಕೊಲೆಯಾದ ವ್ಯಕ್ತಿಯನ್ನು ಖಲೀಮ್ ಖಾನ್ (35) ಎಂದು ಗುರುತಿಸಲಾಗಿದೆ. ಸೂಲಿಬೆಲೆಯಲ್ಲಿ ಹಣ್ಣಿನ ವ್ಯಾಪಾರ ಮಾಡುತ್ತಿದ್ದ ಈತ ಇಂದು ಬೆಳಿಗ್ಗೆ ತನ್ನ ಬೈಕ್ನಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಗಳು ಹೊಂಚು ಹಾಕಿ ದಾಳಿ ನಡೆಸಿದ್ದಾರೆ. ಬೈಕ್ ಅಡ್ಡಗಟ್ಟಿದ ಆಸಾಮಿಗಳು ತಲವಾರ್ ಬಳಸಿ ಖಲೀಮ್ ದೇಹಕ್ಕೆ ಸುಮಾರು 8 ರಿಂದ 10 ಬಾರಿ ಚುಚ್ಚಿ ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವದಿಂದಾಗಿ ಖಲೀಮ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಕೊಲೆಯು ಹಳೆಯ ಹಗೆತನದ ಹಿನ್ನೆಲೆಯಲ್ಲಿ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಸೂಲಿಬೆಲೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತಲೆಮರೆಸಿಕೊಂಡಿರುವ ಹಂತಕರಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

