ಶಿವಮೊಗ್ಗ ನಗರದ ಗಾಂಧಿಬಜಾರ್ನ ಕರಿದೇವರ ಕೇರಿಯಲ್ಲಿ ನಡೆದ ರೌಡಿಶೀಟರ್ ನರಸಿಂಹ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳು ಕೋಟೆ ಠಾಣೆ ಪೊಲೀಸರಿಗೆ ಶರಣಾಗಿದ್ದಾರೆ. ಅಂಬು ಅಲಿಯಾಸ್ ಅನಿಲ್, ಮಧು, ರವಿ, ಕತ್ತೆ ಕಾರ್ತಿಕ್ ಹಾಗೂ ಶಬರೀಶ್ ಶರಣಾದ ಆರೋಪಿಗಳಾಗಿದ್ದು, ಅವರನ್ನು ವಶಕ್ಕೆ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎ.ಜಿ. ಕಾರಿಯಪ್ಪ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಶುಕ್ರವಾರ ಸಂಜೆ ನರಸಿಂಹನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆಗೈದಿದ್ದ ಆರೋಪಿಗಳು 24 ಗಂಟೆಯೊಳಗೆ ಪೊಲೀಸರ ವಶಕ್ಕೆ ಬಂದಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಈ ಹತ್ಯೆಯ ಹಿಂದೆ ಹಳೆಯ ವೈಷಮ್ಯವೇ ಪ್ರಮುಖ ಕಾರಣವಾಗಿದೆ. ಈ ಹಿಂದೆ ನರಸಿಂಹನು ಕತ್ತೆ ಕಾರ್ತಿಕ್ ಮೇಲೆ ದಾಳಿ ಮಾಡಲು ಯತ್ನಿಸಿದ್ದಲ್ಲದೆ, ದೂರವಾಣಿ ಮೂಲಕ ಬೆದರಿಕೆಯನ್ನೂ ಹಾಕಿದ್ದ ಎನ್ನಲಾಗಿದೆ. ಇದೇ ದ್ವೇಷದ ಹಿನ್ನೆಲೆಯಲ್ಲಿ ನರಸಿಂಹನ ಮೇಲೆ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ ಎಂದು ತನಿಖೆಯಿಂದ ತಿಳಿದುಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

