ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಿದ್ದ ಮಾಜಿ ರೌಡಿ ಶೀಟರ್ ಮಚ್ ಮಂಜನನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಒಂದು ವಾರದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ತಾಸಗಾಂವದಲ್ಲಿ ವಿಶೇಷ ಪೊಲೀಸ್ ತಂಡ ಸೆರೆಹಿಡಿದಿದೆ. ಕಳೆದ ಭಾನುವಾರ ಹಳಿಯಾಳದ ಮೌರ್ಯ ಬಾರ್ ಆಂಡ್ ರೆಸ್ಟೋರೆಂಟ್ ಬಳಿ ಕುಡಿದ ಅಮಲಿನಲ್ಲಿದ್ದ ಮಚ್ ಮಂಜ, ಹೆಂಡತಿಯ ವಿಚ್ಛೇದನಕ್ಕೆ ಪೊಲೀಸರೇ ಕಾರಣ ಎಂದು ಆರೋಪಿಸಿ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದ. ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಘಟನೆಯ ವೇಳೆ ಕರ್ತವ್ಯ ಲೋಪ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಹಳಿಯಾಳ ಪಿಎಸ್ಐ ಬಸವರಾಜ್ ಮಬನೂರ ಅವರನ್ನು ಅಮಾನತುಗೊಳಿಸಲಾಗಿದ್ದು, ಠಾಣೆಯ 8 ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ. ಇದೀಗ ಪ್ರಮುಖ ಆರೋಪಿಯ ಬಂಧನದೊಂದಿಗೆ ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

