ಉತ್ತರ ಕನ್ನಡ: ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್ನಲ್ಲಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪ್ರವಾಸಕ್ಕೆ ತೆರಳುತ್ತಿದ್ದ ತೂಫಾನ್ ಕ್ರೂಸರ್ ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರೆಲ್ಲರೂ ಧಾರವಾಡ ಮೂಲದ ಯುವಕರಾಗಿದ್ದು, ಖಾಸಗಿ ಆಹಾರ ವಿತರಣೆ ಸಂಸ್ಥೆ ಸ್ವಿಗ್ಗಿ ಯಲ್ಲಿ ಪಾರ್ಟ್ಟೈಮ್ ಡೆಲಿವರಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಕೆಲಸದ ಒತ್ತಡದಿಂದ ವಿರಾಮ ಪಡೆಯಲು ಧರ್ಮಸ್ಥಳ ಹಾಗೂ ಚಿಕ್ಕಮಗಳೂರು ಪ್ರವಾಸಕ್ಕೆ ತೆರಳಿದ್ದ ವೇಳೆ ಯಲ್ಲಾಪುರದ ಅರಬೈಲ್ ಘಾಟ್ನ ಬಳಗಾರ್ ಸಮೀಪ ಈ ದುರ್ಘಟನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ಕ್ರೂಸರ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ನಾಲ್ವರನ್ನು ಸ್ಥಳೀಯರು ಹಾಗೂ ರಕ್ಷಣಾ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ. ಘಟನಾ ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಅಪಘಾತದ ನಿಖರ ಕಾರಣ ತಿಳಿಯಲು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

