ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸೂರತ್ಕಲ್ ಬಳಿ ಅಕ್ರಮವಾಗಿ ನೆಲೆಸಿದ್ದ ಆರು ಮಂದಿ ಬಾಂಗ್ಲಾದೇಶಿ ವಲಸಿಗರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಯಾವುದೇ ಕಾನೂನುಬದ್ಧ ದಾಖಲೆಗಳಿಲ್ಲದೆ ಭಾರತದ ಗಡಿಯೊಳಗೆ ನುಸುಳಿ, ಮಂಗಳೂರಿನಲ್ಲಿ ತಂಗಿದ್ದರು ಎನ್ನಲಾಗಿದೆ. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಸೂರತ್ಕಲ್ ವ್ಯಾಪ್ತಿಯಲ್ಲಿ ಇವರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಬಾಂಗ್ಲಾದೇಶಿ ವಲಸಿಗರು ಮಂಗಳೂರಿನ ಸೂರತ್ಕಲ್ನ ಮುಕ್ಕ ಎಂಬಲ್ಲಿ ನಿರ್ಮಾಣ ಹಂತದಲ್ಲಿದ್ದ ಖಾಸಗಿ ಆಸ್ಪತ್ರೆಯೊಂದರ ಕಟ್ಟಡ ಕಾಮಗಾರಿಯಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಕಡಿಮೆ ಕೂಲಿಗೆ ಸಿಗುತ್ತಾರೆಂಬ ಕಾರಣಕ್ಕೆ ಇವರನ್ನು ಕೆಲಸಕ್ಕೆ ನಿಯೋಜಿಸಲಾಗಿತ್ತೇ ಅಥವಾ ಇವರ ಹಿನ್ನೆಲೆಯ ಬಗ್ಗೆ ಗುತ್ತಿಗೆದಾರರಿಗೆ ಮಾಹಿತಿ ಇತ್ತೇ ಎಂಬಿತ್ಯಾದಿ ಕೋನಗಳಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸದ್ಯ ಬಂಧಿತ ಆರೋಪಿಗಳ ವಿರುದ್ಧ ಅಕ್ರಮ ನುಸುಳುವಿಕೆ ಮತ್ತು ವಿದೇಶಿಯರ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಇವರಿಗೆ ಮಂಗಳೂರಿಗೆ ಬರಲು ಯಾರು ಸಹಾಯ ಮಾಡಿದ್ದರು ಮತ್ತು ಇವರ ಹಿಂದೆ ಯಾವುದಾದರೂ ದೊಡ್ಡ ಜಾಲವಿದೆಯೇ ಎಂಬ ಬಗ್ಗೆ ಸೂರತ್ಕಲ್ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

