ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬ್ಯಾಗವಾದಿ ಗ್ರಾಮದಲ್ಲಿ ಬಂಡಿ ದಾರಿ ವಿವಾದಕ್ಕೆ ಸಂಬಂಧಿಸಿದ ಎರಡು ಕುಟುಂಬಗಳ ನಡುವಿನ ಮಾರಾಮಾರಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಡಿವೆಪ್ಪ ಉದ್ದನಕಾಲು (60) ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜುಲೈ 15ರಂದು ನಡೆದ ಘರ್ಷಣೆಯಲ್ಲಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಜಮೀನಿನ ಬಂಡಿ ದಾರಿ ಅತಿಕ್ರಮಣ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಹಲವು ದಿನಗಳಿಂದ ವಿವಾದ ನಡೆಯುತ್ತಿತ್ತು. ಜಗಳದ ವೇಳೆ ಬಡಿಗೆ, ಕುಡಗೋಲುಗಳಿಂದ ಹಲ್ಲೆ ನಡೆದಿದ್ದು, ಆರೋಪಿಯೊಬ್ಬ ಟೆಂಪೋ ಟ್ರಾವೆಲರ್ ವಾಹನವನ್ನು ಜನರ ಮೇಲೆಯೇ ಹರಿಸಿದ ಪರಿಣಾಮ ಅಡಿವೆಪ್ಪ ಗಂಭೀರವಾಗಿ ಗಾಯಗೊಂಡಿದ್ದರು. ಅಡಿವೆಪ್ಪ ಅವರ ಸಾವಿನ ಬಳಿಕ ಕುಟುಂಬಸ್ಥರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಹಾಗೂ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ, ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

