ಬಂಟ್ವಾಳದ ಬಿ.ಸಿ.ರೋಡ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯಾ (21) ಅವರನ್ನು ತಲವಾರಿನಿಂದ ಹತ್ಯೆ ಮಾಡಿದ ಪ್ರಕರಣದಲ್ಲಿ ಆರೋಪಿ ಚೇತನ್ (22)ನನ್ನು ಪೊಲೀಸರು ಮಂಗಳೂರಿನಲ್ಲಿ ಬಂಧಿಸಿದ್ದಾರೆ. ಬಂಧನದ ವೇಳೆ ಆತ ವಿಷ ಸೇವಿಸಿದ್ದರಿಂದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಎಸ್ಪಿ ಅರುಣ್ ಕುಮಾರ್ ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ದೂರದ ಸಂಬಂಧಿಯಾಗಿದ್ದ ಚೇತನ್ ಲಾವಣ್ಯಾಳನ್ನು ಏಕಪಕ್ಷೀಯವಾಗಿ ಪ್ರೀತಿಸುತ್ತಿದ್ದು, ಇದೇ ಕಾರಣಕ್ಕೆ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಲಾವಣ್ಯಾ ಕಳೆದ ಎಂಟು ತಿಂಗಳಿಂದ ಕಲ್ಲಡ್ಕ ಸಮೀಪ ನರ್ಸಿಂಗ್ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಬಸ್ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಆರೋಪಿ ಬಸ್ ನಿಲ್ದಾಣಕ್ಕೆ ಬಂದು ಯುವತಿಯನ್ನು ಬೆನ್ನಟ್ಟಿ ತಲವಾರಿನಿಂದ ಹಲ್ಲೆ ನಡೆಸಿದ್ದಾನೆ. ತಡೆಯಲು ಬಂದವರಿಗೂ ಬೆದರಿಕೆ ಹಾಕಿ ಸ್ಥಳದಿಂದ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಳಿಕ ಬಂಧಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

