ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಗೊರನಹಳ್ಳಿಯಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಭೀಕರ ದುರಂತವೊಂದು ಸಂಭವಿಸಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಗನೇ ತಂದೆಯನ್ನು ಭೀಕರವಾಗಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ನಿವೃತ್ತ ಶಿಕ್ಷಕರಾಗಿದ್ದ ಚನ್ನಗೌಡ (76) ಅವರೇ ಮಗನಿಂದ ಕೊಲೆಯಾದ ದುರ್ದೈವಿ. ಇವರನ್ನು ಕೊಂದ ಮಗ ಬಿಂದುಕುಮಾರ್ (42) ಎಂಬಾತ ತದನಂತರ ತಾನೂ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾನೆ. ಮನೆಯಲ್ಲಿ ಆಸ್ತಿ ಹಂಚಿಕೆ ವಿಚಾರವಾಗಿ ಕಳೆದ ಕೆಲವು ದಿನಗಳಿಂದ ತಂದೆ-ಮಗನ ನಡುವೆ ತೀವ್ರ ಘರ್ಷಣೆ ನಡೆಯುತ್ತಿತ್ತು ಎನ್ನಲಾಗಿದೆ. ಘಟನಾ ದಿನವೂ ಇದೇ ವಿಚಾರವಾಗಿ ಗಲಾಟೆ ವಿಕೋಪಕ್ಕೆ ತಿರುಗಿದ್ದು, ಆಕ್ರೋಶಗೊಂಡ ಬಿಂದುಕುಮಾರ್ ತಂದೆಯ ಮೇಲೆ ಹಲ್ಲೆ ನಡೆಸಿ ಜೀವ ತೆಗೆದಿದ್ದಾನೆ. ತಂದೆ ಮೃತಪಡುತ್ತಿದ್ದಂತೆ ಆತಂಕಗೊಂಡ ಮಗ, ತಾನೂ ಸಹ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

