ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಪತ್ನಿಯೊಬ್ಬಳು ಪ್ರಿಯಕರನೊಂದಿಗೆ ಸೇರಲು ಪತಿಯನ್ನು ಕೊಲೆ ಮಾಡಿರುವ ಶಂಕಿತ ಪ್ರಕರಣ ಬೆಳಕಿಗೆ ಬಂದಿದೆ. ಮೇ 6ರಂದು ಅರುಣಕುಮಾರ್ ಬಡಿಗೇರ (28) ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಹೇಳಿ ಅಂತ್ಯಸಂಸ್ಕಾರ ನಡೆಸಲಾಗಿತ್ತು. ಆದರೆ ಬಳಿಕ ಕುಟುಂಬಸ್ಥರಿಗೆ ಅನುಮಾನ ಮೂಡಿ, ಪತ್ನಿ ಭಾಗ್ಯಶ್ರೀಯ ಮೊಬೈಲ್ ಪರಿಶೀಲಿಸಿದಾಗ ಚಾಟಿಂಗ್, ವಿಡಿಯೊ ಕರೆಗಳ ದಾಖಲೆಗಳು ಪತ್ತೆಯಾಗಿವೆ ಎಂದು ಆರೋಪಿಸಲಾಗಿದೆ. ಕುಟುಂಬದವರ ಆರೋಪದಂತೆ, ಭಾಗ್ಯಶ್ರೀ ತನ್ನ ಕಾಲೇಜು ಸಹಪಾಠಿ ದೀಪಕ್ ನಾವಾದಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದು, ಮೇ 5ರ ರಾತ್ರಿ ಪತಿಗೆ ಊಟದಲ್ಲಿ ನಿದ್ದೆ ಮಾತ್ರೆ ನೀಡಿ, ಮುಂಜಾನೆ ಗಾಢ ನಿದ್ರೆಯಲ್ಲಿದ್ದಾಗ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ಈ ಡಿಜಿಟಲ್ ಸಾಕ್ಷ್ಯಗಳ ಆಧಾರದ ಮೇಲೆ ಜುಲೈ 19ರಂದು ಇಂಡಿ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣ ಸಂಬಂಧ ಆರೋಪಿ ಪತ್ನಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕವೇ ಸಾವಿನ ನಿಖರ ಕಾರಣ ಮತ್ತು ಆರೋಪಗಳ ಸತ್ಯಾಸತ್ಯತೆ ಸ್ಪಷ್ಟವಾಗಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

