ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಮಲನಾಯ್ಕನ ತಾಂಡದಲ್ಲಿ 2022ರ ಯುಗಾದಿ ದಿನ ನಡೆದಿದ್ದ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರಿನ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಪತಿಯನ್ನು ಕೊಂದು ಹೊಸ ಮನೆಯ ಅಡಿಪಾಯದಲ್ಲಿ ಶವ ಹೂತು ಸಾಕ್ಷ್ಯ ನಾಶಪಡಿಸಲು ಯತ್ನಿಸಿದ್ದ ಪ್ರಕರಣದಲ್ಲಿ ಪ್ರಮುಖ ಆರೋಪಿ ರಾಜಾನಾಯ್ಕನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಮೃತ ರವಿಚಂದ್ರನಾಯ್ಕ ತಮ್ಮ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾರೆ ಎಂಬ ಕಾರಣಕ್ಕೆ ಪತ್ನಿ ಸಾವಿತ್ರಿಬಾಯಿ ಹಾಗೂ ಆಕೆಯ ಪ್ರಿಯಕರ ರಾಜಾನಾಯ್ಕ ಸೇರಿ ಕೊಲೆ ಮಾಡಿದ್ದರು. ಬಳಿಕ ಮೃತದೇಹವನ್ನು ಬೆಡ್ಶೀಟ್ನಲ್ಲಿ ಸುತ್ತಿ ನಿರ್ಮಾಣ ಹಂತದಲ್ಲಿದ್ದ ಮನೆಯ ಅಡಿಪಾಯದಲ್ಲಿ ಹೂತು, ಅದರ ಮೇಲೆ ಮಣ್ಣು ಹಾಕಿ ಪ್ರಕರಣವನ್ನು ಮರೆಮಾಚಲು ಯತ್ನಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಸಾಕ್ಷ್ಯಾಧಾರಗಳ ಆಧಾರದಲ್ಲಿ ರಾಜಾನಾಯ್ಕನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಸರ್ಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ವಿ.ಎ. ಕವಿತ ವಾದ ಮಂಡಿಸಿದ್ದರು. ಪ್ರಕರಣದ ಎರಡನೇ ಆರೋಪಿ ಸಾವಿತ್ರಿಬಾಯಿ ವಿಚಾರಣೆ ನಡೆಯುವ ವೇಳೆ ಅನಾರೋಗ್ಯದಿಂದ ಮೃತಪಟ್ಟಿದ್ದರಿಂದ ಆಕೆಯ ವಿರುದ್ಧದ ಕಾನೂನು ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news

