ಬೆಂಗಳೂರು: ಕೆಎಎಸ್ ಪರೀಕ್ಷೆ ಫಲಿತಾಂಶಕ್ಕಾಗಿ ಕಾಯುತ್ತಿದ್ದ ಅಭ್ಯರ್ಥಿಯೊಬ್ಬರು ಗೆಜೆಟೆಡ್ ಪ್ರೊಬೇಷನರಿ ಹುದ್ದೆ ಪಡೆಯಲು ಅಕ್ರಮ ಮಾರ್ಗ ಅನುಸರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಕೆಪಿಎಸ್ಸಿ ಸದಸ್ಯೆ ಶಾಂತಾ ಹೊಸಮನಿ ಹಾಗೂ ಕಲಬುರಗಿ ಮೂಲದ ಅಭ್ಯರ್ಥಿ ಮಮಿತಾ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮಮಿತಾ ಅವರು ಹುದ್ದೆ ಪಡೆಯುವ ಉದ್ದೇಶದಿಂದ ಕೆಪಿಎಸ್ಸಿ ಸದಸ್ಯೆ ಶಾಂತಾ ಹೊಸಮನಿ ಅವರನ್ನು ಸಂಪರ್ಕಿಸಿ ಅಕ್ರಮವಾಗಿ ಹಣ ನೀಡಲು ಮುಂದಾಗಿದ್ದರು ಎಂದು ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಅಧ್ಯಕ್ಷ ಕಾಂತಕುಮಾರ್ ದೂರು ನೀಡಿದ್ದರು. ದಾಖಲೆ ಪರಿಶೀಲನೆ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಇತ್ತೀಚೆಗೆ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣದ ತನಿಖೆ ಸಿಐಡಿಗೆ ವಹಿಸಿರುವ ಬೆನ್ನಲ್ಲೇ ಮತ್ತೊಂದು ನೇಮಕಾತಿ ಅಕ್ರಮ ಆರೋಪ ಬೆಳಕಿಗೆ ಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

