ಬೆಂಗಳೂರು: ಕೆಪಿಎಸ್ಸಿ ಸದಸ್ಯೆ ಶಾಂತಾ ಹೊಸಮನಿ ಹಾಗೂ ಕಲಬುರಗಿ ಮೂಲದ ಅಭ್ಯರ್ಥಿ ಮಮಿತಾ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಗೆಜೆಟೆಡ್ ಪ್ರೊಬೇಷನರಿ ಹುದ್ದೆ ಪಡೆಯಲು ಮಮಿತಾ ಅವರು ಕೆಪಿಎಸ್ಸಿ ಸದಸ್ಯರನ್ನು ಸಂಪರ್ಕಿಸಿ ಅಕ್ರಮವಾಗಿ ಹಣ ನೀಡಲು ಮುಂದಾಗಿದ್ದಾರೆ ಎಂದು ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಅಧ್ಯಕ್ಷ ಕಾಂತಕುಮಾರ್ ದೂರು ನೀಡಿದ್ದರು. ಮಮಿತಾ ಕೆಎಎಸ್ ಸಂದರ್ಶನ ಎದುರಿಸಿ ಫಲಿತಾಂಶದ ನಿರೀಕ್ಷೆಯಲ್ಲಿದ್ದು, ಅಕ್ರಮ ವ್ಯವಹಾರಕ್ಕಾಗಿ ಶಾಂತಾ ಹೊಸಮನಿ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬ ಮಾಹಿತಿ ಲಭಿಸಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಕೆಪಿಎಸ್ಸಿಯಿಂದ ದಾಖಲೆ ಪಡೆದು ಪ್ರಾಥಮಿಕ ವಿಚಾರಣೆ ನಡೆಸಿದ ಬಳಿಕ ಪೊಲೀಸರು ಗಂಭೀರ ಸ್ವರೂಪದ ಅಪರಾಧ ಕಂಡುಬಂದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಇದೇ ವೇಳೆ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಅಮಾನತುಗೊಂಡಿರುವ ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಸೇರಿದಂತೆ ಹಲವರ ವಿರುದ್ಧವೂ ಎಫ್ಐಆರ್ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದ್ದು, ಶಿವಶಂಕರಪ್ಪ ಸಾಹುಕಾರ್ ಹಾಗೂ 29 ಅಭ್ಯರ್ಥಿಗಳನ್ನು ವಿಚಾರಣೆಗೆ ಒಳಪಡಿಸಲು ಸಿಐಡಿ ಸಿದ್ಧತೆ ನಡೆಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

