ಚಿಕ್ಕಮಗಳೂರು: ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಅವರ ಹೆಸರು ಮತ್ತು ಭಾವಚಿತ್ರ ದುರುಪಯೋಗಪಡಿಸಿಕೊಂಡು ಸೈಬರ್ ವಂಚಕರು ಆಹಾರ ಇಲಾಖೆಯ ಉಪನಿರ್ದೇಶಕ ಯೋಗಾನಂದ್ ಅವರಿಗೆ ₹50 ಸಾವಿರ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ವಂಚಕರು ಡಿಸಿ ಹೆಸರಿನಲ್ಲಿ ನಕಲಿ ವಾಟ್ಸಪ್ ಖಾತೆ ಸೃಷ್ಟಿಸಿ, ತುರ್ತಾಗಿ ಹಣ ವರ್ಗಾಯಿಸುವಂತೆ ಯೋಗಾನಂದ್ ಅವರಿಗೆ ಸಂದೇಶ ಕಳುಹಿಸಿದ್ದರು. ಜಿಲ್ಲಾಧಿಕಾರಿಗಳೇ ಸಂದೇಶ ಕಳುಹಿಸಿದ್ದಾರೆಂದು ನಂಬಿದ ಅವರು, ವಂಚಕರು ನೀಡಿದ್ದ ಬ್ಯಾಂಕ್ ಖಾತೆಗೆ ₹50 ಸಾವಿರ ಆನ್ಲೈನ್ ಮೂಲಕ ವರ್ಗಾಯಿಸಿದ್ದರು. ಬಳಿಕ ವಂಚನೆ ನಡೆದಿರುವುದು ತಿಳಿದು ಸಿಇಎನ್ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಥೈಲ್ಯಾಂಡ್ನ ವರ್ಚುವಲ್ ನಂಬರ್ ಬಳಸಿ ನಕಲಿ ವಾಟ್ಸಪ್ ಬಿಸಿನೆಸ್ ಖಾತೆ ಸೃಷ್ಟಿಸಿರುವುದು ಪತ್ತೆಯಾಗಿದೆ. ಅಪರಿಚಿತ ಅಂತರರಾಷ್ಟ್ರೀಯ ನಂಬರ್ಗಳಿಂದ ಬರುವ ಸಂದೇಶಗಳಿಗೆ ಪ್ರತಿಕ್ರಿಯಿಸದಂತೆ ಹಾಗೂ ಬ್ಯಾಂಕ್ ವಿವರ, ಒಟಿಪಿ ಸೇರಿದಂತೆ ಯಾವುದೇ ಹಣಕಾಸಿನ ಮಾಹಿತಿಯನ್ನು ಹಂಚಿಕೊಳ್ಳದಂತೆ ಜಿಲ್ಲಾಧಿಕಾರಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

