ಬೆಂಗಳೂರು ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ಪತಿ-ಪತ್ನಿಯ ನಡುವಿನ ಜಗಳ ದುರಂತಕ್ಕೆ ತಿರುಗಿದೆ. ಸಿವಿಲ್ ಎಂಜಿನಿಯರ್ ಸುಮಂತ್ ಜೈನ್ ಹಾಗೂ ಸಾಫ್ಟ್ವೇರ್ ಎಂಜಿನಿಯರ್ ಪದ್ಮಾವತಿ ನಡುವೆ ಜಗಳ ನಡೆದಿದ್ದು, ಹಿಂಸಾತ್ಮಕ ಸ್ವರೂಪ ಪಡೆದಿದೆ ಎನ್ನಲಾಗಿದೆ. ಜಗಳದ ವೇಳೆ ಸುಮಂತ್ ಪತ್ನಿಯ ಮುಖಕ್ಕೆ ಹೊಡೆದು, ಬಳಿಕ ದಿಂಬಿನಿಂದ ಉಸಿರುಗಟ್ಟಿಸಿ ಕೊಂದಿರುವ ಆರೋಪ ಕೇಳಿಬಂದಿದೆ. ಘಟನೆ ಬಳಿಕ ಆತಂಕಗೊಂಡ ಸುಮಂತ್ ತಾಯಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ತಾಯಿ ಮನೆಯ ಮಾಲೀಕರಿಗೆ ವಿಷಯ ತಿಳಿಸಿದ್ದು, ಬಾಗಿಲು ತೆರೆದಾಗ ಸುಮಂತ್ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪದ್ಮಾವತಿ ಕೂಡ ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ರಾಜಗೋಪಾಲನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪದ್ಮಾವತಿಯ ಸಾವಿಗೆ ನಿಖರ ಕಾರಣ ಸೇರಿದಂತೆ ಘಟನೆಯ ಸಂಪೂರ್ಣ ವಿವರಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

