ಬೆಳಗಾವಿ: ರಾಯಭಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 15 ವರ್ಷದ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಗೌತಮ್ ಭಜಂತ್ರಿ ಎಂಬ ಬಾಲಕನ ಮೃತದೇಹ ಶಾಲೆಯ ಕೊಠಡಿಯ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆದರೆ ಬಾಲಕನ ತಾಯಿ ಲಕ್ಷ್ಮೀಬಾಯಿ ಭಜಂತ್ರಿ ಅವರು ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಶಾಲೆಯ ಆವರಣದಲ್ಲೇ ಮಗನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ಬಳಿಕ ಆತ್ಮಹತ್ಯೆ ಎಂದು ಬಿಂಬಿಸಲು ಕಿಟಕಿಗೆ ನೇಣು ಹಾಕಲಾಗಿದೆ ಎಂದು ಆರೋಪಿಸಿ ನ್ಯಾಯಕ್ಕಾಗಿ ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪೋಷಕರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಶಾಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸುತ್ತಿದ್ದು, ಮರಣೋತ್ತರ ಪರೀಕ್ಷೆ ವರದಿ ಬಳಿಕ ಸಾವಿನ ನಿಖರ ಕಾರಣ ತಿಳಿಯಲಿದೆ ಎಂದು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
