ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ರೈಲ್ವೆ ಪೊಲೀಸ್ ಸಿಬ್ಬಂದಿ ಸೇರಿದಂತೆ ಇತರರು ಕೂಡ ಯುವತಿಗೆ ಬೆದರಿಕೆ ಹಾಕಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾಗಿದೆ. ಕುಟುಂಬದ ಸಮಸ್ಯೆಯಿಂದ ಬೇಸತ್ತ ಯುವತಿ ಬೆಂಗಳೂರಿನಿಂದ ಯಾದಗಿರಿಗೆ ರೈಲಿನಲ್ಲಿ ಬಂದಿದ್ದು, ನಿಲ್ದಾಣದ ವೇಟಿಂಗ್ ರೂಮ್ನಲ್ಲಿ ಕುಳಿತಿದ್ದ ವೇಳೆ ಮಲ್ಲಪ್ಪ ಎಂಬಾತ ಪರಿಚಯ ಮಾಡಿಕೊಂಡಿದ್ದ. ನಂತರ ಸಂಬಂಧಿಕರ ಮನೆಗೆ ಕರೆದೊಯ್ದು ಕೃತ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ತುರ್ತು ಸ್ಪಂದನಾ ಸಿಬ್ಬಂದಿಯ ನೆರವಿನಿಂದ ಯುವತಿಯನ್ನು ರಕ್ಷಿಸಲಾಗಿದ್ದು, ಆಕೆಯ ಲಿಖಿತ ದೂರಿನ ಆಧಾರದ ಮೇಲೆ ಯಾದಗಿರಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಲ್ಲಪ್ಪ, ರೈಲ್ವೆ ಸಿಬ್ಬಂದಿ ಶರಣಪ್ಪ ಸೇರಿದಂತೆ ಒಟ್ಟು ಆರು ಮಂದಿ ವಿರುದ್ಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
