ನಟ ಹಾಗೂ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ರವರು ಇಂದು ಅನಾರೋಗ್ಯದ ಹಿನ್ನೆಲೆಯಲ್ಲಿ ವಿಧಿವಶರಾದರು. ಬೆಂಗಳೂರಿನ ಲ್ಯಾವಲೆ ರಸ್ತೆಯಲ್ಲಿ ಇರುವ ತಮ್ಮ ಮನೆಯಲ್ಲಿ ಕೊನೆ ಉಸಿರು ಎಳೆದಿದ್ದಾರೆ. ಕಾರ್ನಾಡ್ ರವರ ವಿಧಿವಶ ಹಿನ್ನೆಲೆಯಲ್ಲಿ ಹಿರಿಯ ಸಾಹಿತಿಗಳು, ಕಲಾವಿದರು, ರಾಜಕಾರಣಿಗಳು ಕಂಬನಿ ಮಿಡಿದಿದ್ದಾರೆ.ಗಿರೀಶ್ ಕಾರ್ನಾಡರು 1934 ಮೇ 19ರಂದು ಮಹಾರಾಷ್ಟ್ರದ ಮಾಥೇರದಲ್ಲಿ ಜನಿಸಿದರು. ಕಾರ್ನಾಡರ ಪ್ರಾಥಮಿಕ ಶಿಕ್ಷಣ ಉತ್ತರಕನ್ನಡದ ಶಿರಸಿಯಲ್ಲಿ, ಪ್ರೌಢಶಿಕ್ಷಣ ಧಾರವಾಡದ ಬಾಸೆಲ್ ಮಿಷನ್ ಹೈಸ್ಕೂಲಿನಲ್ಲಿ, ಹಾಗೂ ಪದವಿ ಶಿಕ್ಷಣ ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಆಯಿತು. ಆ ಬಳಿಕ ಪ್ರತಿಷ್ಠಿತ ರೋಡ್ಸ್ ಸ್ಕಾಲರ್ಶಿಪ್ ಪಡೆದುಕೊಂಡು ಆಕ್ಸ್ ಫರ್ಡಿನಲ್ಲಿ ಹೆಚ್ಚಿನ ವ್ಯಾಸಂಗ ಮಾಡಿದರು. ಆಕ್ಸ್ ಫರ್ಡಿನ ಡಿಬೇಟ್ ಕ್ಲಬ್ಬಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಥಮ ಏಷಿಯನ್ ಇವರು. ಮದ್ರಾಸಿನಲ್ಲಿ ನೌಕರಿಯಲ್ಲಿದ್ದ ಇವರು ಶಿಕಾಗೋ ವಿಶ್ವವಿದ್ಯಾಲಯದಲ್ಲಿ ಸಂದರ್ಶನ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಇಂಗ್ಲೆಂಡಿನಲ್ಲಿ ನೆಹರೂ ಸೆಂಟರಿನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಪೂನಾ ಫಿಲ್ಮ್ ಇನ್ಸ್ಟಿಟ್ಯೂಟಿನ ನಿರ್ದೇಶಕರಾಗಿ, ಕೇಂದ್ರ ಸಂಗೀತ ನಾಟಕ ಅಕಾಡೆಮಿಯ ಅಧ್ಯಕ್ಷರಾಗಿ ಕೂಡಾ ಅವರು ಕಾರ್ಯನಿರ್ವಹಿಸಿರುವರು.ಕನ್ನಡ ಸಾಹಿತ್ಯದಲ್ಲಿ ನಾಟಕ ಕ್ಷೇತ್ರದ ಸಾಹಿತಿ ಎಂದು ಕರೆಯಲ್ಪಡುವ ಗಿರೀಶ್ ಕಾರ್ನಾಡ್, ಕನ್ನಡದಲ್ಲಿ ನಾಟಕ ರಚಿಸುತ್ತಾ ಇತರ ಭಾರತೀಯ ಭಾಷೆಗಳೊಡನೆ ಸಂಪರ್ಕವನ್ನಿಟ್ಟುಕೊಂಡು ನಟರಾಗಿ, ನಿರ್ದೇಶಕರಾಗಿ, ಸಾಂಸ್ಕ್ರತಿಕ ವಕ್ತಾರರಾಗಿ ಕೆಲಸ ಮಾಡಿದವರು.
bigtvnews | Hubli Dharwad News | Kannada News | Karnataka News Hubli News | News In Hubli | Local news





