ಚಾಮರಾಜನಗರ: ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿ, ಆಶಾ ಕಾರ್ಯಕರ್ತೆಯರು ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಆಶಾ ಕಾರ್ಯಕರ್ತೆಯರು, ತಮ್ಮ ಕನಿಷ್ಠ ಬೇಡಿಕೆ ಗಳನ್ನ ಈಡೇರಿಸುವಂತೆ ಘೋಷಣೆ ಕೂಗಿದರು. ನಂತರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಕೆಲಕಾಲ ಧರಣಿ ನಡೆಸಿದ ಪ್ರತಿಭಟನಾಕಾರರು, ತಮ್ಮ ಬೇಡಿಕೆಗಳನ್ನ ಈಡೇರಿಸುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರವನ್ನ ಒತ್ತಾಯಿಸಿದರು.ರಾಜ್ಯದ ಆರೋಗ್ಯ ಇಲಾಖೆಯಡಿಯಲ್ಲಿ ಹಳ್ಳಿ ಮತ್ತು ನಗರ ಪ್ರದೇಶಗಳಲ್ಲಿ ಗರ್ಭಿಣಿ ಮಹಿಳೆಯರ ಸುರಕ್ಷಿತ ಹೆರಿಗೆ, ಸ್ವಸ್ಥ ಶಿಶುವಿನ ಜನನ, ಆರೋಗ್ಯ ಮತ್ತು ಪೌಷ್ಠಿಕತೆಯ ಅರಿವು, ಕ್ಷಯ, ಕುಷ್ಠರೋಗ, ಮಲೇರಿಯಾ, ಡೆಂಗ್ಯೂ, ಚಿಕ್ಯೂನ್ ಗುನ್ಯ ಇತ್ಯಾದಿ ಸಾಂಕ್ರಾಮಿಕ ರೋಗಗಳನ್ನ ತಡೆಗಟ್ಟುವಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಪ್ರಮುಖವಾಗಿದ್ದು, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ನೀಡುವ ಪ್ರೋತ್ಸಾಹ ಧನವನ್ನ ಒಟ್ಟಿಗೆ ಸೇರಿಸಿ, ಕನಿಷ್ಠ ಮಾಸಿಕ ಗೌರವ ಧನವಾಗಿ 12 ಸಾವಿರ ರೂಪಾಯಿಗಳನ್ನ ನೀಡಬೇಕೆಂದು ಧರಣಿ ನಿರತರು ಆಗ್ರಹಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





