ಹುಬ್ಬಳ್ಳಿ: ಅಖಂಡ ಕರ್ನಾಟಕ ರೈತ ಸಂಘದ ವತಿಯಿಂದ ರೈತ ಹುತಾತ್ಮ ದಿನಾಚರಣೆ ಅಂಗವಾಗಿ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇದೇ 21ರಂದು ಬೆಂಗಳೂರಿನಲ್ಲಿ ರೈತ ಜಾಥಾ ನಡೆಸಲಾಗುವುದು ಎಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯಮಟ್ಟದ ಪದಾಧಿಕಾರಿ ಸಿದ್ಧನಗೌಡ ಪಾಟೀಲ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕುತ್ತಿದ್ದು, ಶೀಘ್ರವಾಗಿ ರೈತರ ಸಾಲ ಮನ್ನಾ ಮಾಡಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿ ಅವರೊಂದಿಗೆ ಸಮಾಲೋಚನೆ ನಡೆಸಲಾಗುತ್ತದೆ ಎಂದರು.ರಾಜ್ಯದಲ್ಲಿ ಜ್ವಲಂತ ಸಮಸ್ಯೆಗಳ ಬಗ್ಗೆ ಹಾಗೂ ಕುಡಿಯುವ ನೀರಿನ ಬಗ್ಗೆ ಸೂಕ್ತ ಕ್ರಮ ಜಾರಿಗೊಳಿಸಬೇಕು. ಕಬ್ಬು ಬೆಳೆಗಾರರಿಗೆ ಪೂರಕವಾದ ಬೆಂಬಲ ಬೆಲೆ ನೀಡಬೇಕು, ರೈತರ ಸಾಲ ಮನ್ನಾ ಜಾರಿ ಮಾಡಬೇಕು, ಕೇಂದ್ರ ಹಾಗೂ ರಾಜ್ಯ ಸರ್ಕಾರ ಬರ ಪರಿಹಾರ ಹಾಗೂ ಬೆಳೆ ವಿಮೆ ಹಣವನ್ನು ರೈತರ ಖಾತೆಗೆ ಜಮಾ ಮಾಡಬೇಕು, ಹಳ್ಳಿಕೆರೆ ಹೂಳು ಎತ್ತುವ ಕಾರ್ಯಕ್ರಮ ಜಾರಿಗೊಳಿಸಬೇಕು, ನಮ್ಮ ಹೊಲ ನಮ್ಮ ದಾರಿ ಜಾರಿ ಮಾಡಬೇಕು, ರಾಜ್ಯದ ಸಾರ್ವಜನಿಕರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಈ ಕೂಡಲೇ ನದಿ ಜೋಡಣೆಗಳ ವಿಚಾರ ಕೈಗೆತ್ತಿಕೊಳ್ಳಬೇಕು ಎಂದು ಅವರು ಆಗ್ರಹಿಸಿದರು.ರಾಜ್ಯ ರಾಜಕಾರಣದಿಂದ ಜನರು ಬೇಸತ್ತಿದ್ದು ಇಂತಹ ವೈಯಕ್ತಿಕ ಸ್ವಾರ್ಥ ಸಾಧನೆಗೆ ಹೋರಾಡುವ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಿ ಕಳಿಸಿರುವುದು ನಮ್ಮ ದುರಾದೃಷ್ಟ. ಅಂದು ನಡೆಯಲಿರುವ ಜಾಥಾವು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಪ್ರಾರಂಭಗೊಂಡು ಮುಖ್ಯಮಂತ್ರಿ ಮನೆಯವರೆಗೆ ಕೈಗೊಳ್ಳಲಾಗುವುದು. ಬಳಿಕ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮನವಿ ಸಲ್ಲಿಸಲಾಗುತ್ತದೆ. ಈ ರೈತ ಜಾಥಾದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ರೈತರು ಹಾಗೂ ರೈತ ಸಂಘಟನೆ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





