ಚಾಮರಾಜನಗರ: ಕಬಿನಿ ಜಲಾಶಯದಿಂದ ಹೆಚ್ಚಾಗಿ ನದಿಗೆ ನೀರು ಹೊರ ಬಿಡಲಾಗುತ್ತಿರುವ ಹಿನ್ನಲೆಯಲ್ಲಿ ಕೊಳ್ಳೇಗಾಲ ತಾಲೂಕಿನ ನದಿ ಪಾತ್ರದ ಗ್ರಾಮಗಳ ಜನರು, ಜಾನುವಾರಗಳ ರಕ್ಷಣೆಗಾಗಿ ಮುಂಜಾಗರೂಕತೆ ಕ್ರಮ ವಹಿಸಲು ಚಾಮರಾಜನಗರ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಗ್ರಾಮವಾರು ನೋಡಲ್ ಅಧಿಕಾರಿಗಳನ್ನು ನಿಯೋಜಿಸಿ ಆದೇಶ ಹೊರಡಿಸಿದ್ದಾರೆ.ಒಟ್ಟು ಎಂಟು ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಈ ಅಧಿಕಾರಿಗಳು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ನದಿಗೆ ನೀರನ್ನು ಬಿಡುವ ಬಗ್ಗೆ ಮಾಹಿತಿ ಪಡೆದು ಪ್ರವಾಹದ ಎಚ್ಚರಿಕೆಯ ಬಗ್ಗೆ ತುರ್ತಾಗಿ ಪ್ರತಿಕ್ರಿಯಿಸಲು ಸೂಚಿಸಲಾಗಿದೆ. ನದಿ ತೀರಗಳಿಗೆ ಸಾರ್ವಜನಿಕರು ತೆರಳದಂತೆ ಮುನ್ನೆಚರಿಕೆ ವಹಿಸಲು ಹಾಗೂ ಪೊಲೀಸ್ ಇಲಾಖೆಯೊಂದಿಗೆ ಸಂಪರ್ಕದಲ್ಲಿದ್ದು ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲು ಸಹ ತಿಳಿಸಲಾಗಿದೆ.ಗ್ರಾಮಗಳಲ್ಲಿ ತುರ್ತು ಚಿಕಿತ್ಸೆ, ಶುದ್ಧ ಕುಡಿಯುವ ನೀರು, ಸ್ವಚ್ಛತೆ, ರಸ್ತೆ ಸೇತುವೆಗಳ ಸ್ಥಿತಿಗತಿ ವ್ಯವಸ್ಥೆ, ಇತರೆ ಅಗತ್ಯ ಕ್ರಮಗಳನ್ನು ವಹಿಸಲು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ. ಗ್ರಾಮಗಳು ಜಲಾವೃತವಾದಲ್ಲಿ ಪರಿಹಾರ ಕೇಂದ್ರಗಳನ್ನು ತೆರೆದು ಸೂಕ್ತ ಸೌಲಭ್ಯಗಳನ್ನು ಒದಗಿಸಿ ಅಗತ್ಯ ನಿರ್ವಹಣೆ ಮಾಡುವ ಸಲುವಾಗಿ ಏಳು ಹಿರಿಯ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನಿಯೋಜಿಸಿ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಆದೇಶಿದ್ದಾರೆ. ಪ್ರವಾಹ ಸಂಭವ ಹಿನ್ನಲೆಯಲ್ಲಿ ಸಂತ್ರಸ್ಥರನ್ನು ಸ್ಥಳಾಂತರಿಸಿ ಆಶ್ರಯ ನೀಡುವ ಸಲುವಾಗಿ ಕೊಳ್ಳೆಗಾಲ ಪಟ್ಟಣದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಪರಿಹಾರ ಕೇಂದ್ರ ತೆರೆಯಲಾಗಿದೆ. ಮೊದಲ ಹಂತವಾಗಿ ಬಾಧಿತಬಹುದಾದ ದಾಸನಪುರ ಜನರನ್ನು ಸ್ಥಳಾಂತರಿಸುವ ಪ್ರಕ್ರಿಯೆಯನ್ನು ಅಧಿಕಾರಿಗಳು ಕೈಗೆತ್ತಿಕೊಳಲಿದ್ದಾರೆ.ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ನದಿಯ ಪಾತ್ರದ ಹಳೇ ಹಂಪಾಪುರ, ಮುಳ್ಳೂರು, ದಾಸನಪುರ, ಹಳೆ ಅಣಗಳ್ಳಿ, ಸತ್ತೇಗಾಲ, ಎಡಕುರಿಯ ಸೇರಿದಂತೆ ಇತರೆ ಗ್ರಾಮಗಳಿಗೆ ವ್ಯಾಪಕ ಭೇಟಿ ನೀಡಿ ಮುಂಜಾಗರೂಕತ ಸಿದ್ಧತಾಕ್ರಮಗಳನ್ನು ಪರಿಶೀಲಿಸಿದರು. ಅಧಿಕಾರಿಗಳು ಅವಶ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಸಂಭವಿಸಬಹುದಾದ ಯಾವುದೇ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲು ಸನ್ನದ್ದರಾಗಿರುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಉಪವಿಭಾಗಧಿಕಾರಿ ನಿಖಿತ, ತಹಶೀಲ್ದಾರ್ ಕುನಾಲ್, ಇತರೆ ಹಿರಿಯ ಪೋಲಿಸ್ ಅಧಿಕಾರಿಗಳು ಇದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





