ಧಾರವಾಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ.ದೀಪಾ ಅವರು ಇಂದು ಅಧಿಕಾರ ಸ್ವೀಕರಿಸಿದರು. ಕೃಷ್ಣಾ ಮೇಲ್ದಂಡೆ ಯೋಜನೆಯ ಪುನರ್ವಸತಿ ವಿಭಾಗದ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ವರ್ಗಾವಣೆಯಾಗಿರುವ ಡಾ.ಎಸ್.ಬಿ.ಬೊಮ್ಮನಹಳ್ಳಿ ಅಧಿಕಾರ ಹಸ್ತಾಂತರಿಸಿದರು.
ತಮ್ಮ ಅಧಿಕಾರಾವಧಿಯಲ್ಲಿ ಎಲ್ಲ ಅಧಿಕಾರಿಗಳು,ಚುನಾಯಿತ ಪ್ರತಿನಿಧಿಗಳು,ಸಿಬ್ಬಂದಿ ವರ್ಗ ,ಮಾಧ್ಯಮ ಹಾಗೂ ಸಾರ್ವಜನಿಕರು ನೀಡಿದ ಸಹಕಾರವನ್ನು ನಿರ್ಗಮಿತ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಸ್ಮರಿಸಿದರು.
ಈ ಹಿಂದೆ ಹುಬ್ಬಳ್ಳಿ ಧಾರವಾಡ ಬಿಆರ್ಟಿಎಸ್ ಯೋಜನೆಯ ವ್ಯವಸ್ಥಾಪಕ ನಿರ್ದೇಶಕಿಯಾಗಿ ಕೆಲಸ ಮಾಡುವ ವೇಳೆ ಸ್ಥಳೀಯ ವಿಷಯಗಳ ಸೂಕ್ಷ್ಮ ಪರಿಚಯವಿದೆ. ಬರುವ ಒಂದು ತಿಂಗಳ ಅವಧಿಯಲ್ಲಿ ಇಲಾಖಾವಾರು ಎಲ್ಲ ವಿಷಯಗಳ ಮಾಹಿತಿ ಪಡೆದು ಜಿಲ್ಲೆಯ ಆಡಳಿತ ಮತ್ತು ಅಭಿವೃದ್ಧಿಗೆ ಒತ್ತು ನೀಡುತ್ತೇನೆ ಎಂದು ನೂತನ ಜಿಲ್ಲಾಧಿಕಾರಿ ಎಂ.ದೀಪಾ ಹೇಳಿದರು.
ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ ಕೋನರಡ್ಡಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ರವೀಂದ್ರ ಕವಲಿ, ತಹಸೀಲ್ದಾರರಾದ ಪ್ರಕಾಶ ಕುದರಿ,ಶಶಿಧರ ಮಾಡ್ಯಾಳ ಮತ್ತಿತರರು ಇದ್ದರು.
ಎಂ.ದೀಪಾ ; ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನಿಂದ ಪದವಿ,ಬೆಂಗಳೂರು ವಿಶ್ವವಿದ್ಯಾಲಯದಿಂದ ಅರ್ಥಶಾಶ್ತçದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ೨೦೦೮ ರ ಬ್ಯಾಚಿನ ಐಎಎಸ್ ಅಧಿಕಾರಿಯಾಗಿರುವ ಇವರು, ಗದಗ ಉಪವಿಭಾಗಾಧಿಕಾರಿ,ಗ್ರಾಮೀಣಾಭಿವೃದ್ಧಿ ಪಂಚಾಯತ್ರಾಜ್ ಇಲಾಖೆಯ ನಿರ್ದೇಶಕಿ,ಬೆಳಗಾವಿ ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಹುಬ್ಬಳ್ಳಿ ಧಾರವಾಡ ಬಿಆರ್ಟಿಎಸ್ ವ್ಯವಸ್ಥಾಪಕ ನಿರ್ದೇಶಕಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾಗಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಇವರ ಪತಿ ರಾಜೇಂದ್ರ ಚೋಳನ್ ಈ ಹಿಂದೆ ಧಾರವಾಡ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ ಬೆಂಗಳೂರಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





