ನೋಟಾ ಆಯ್ಕೆ ನೇರ ಚುನಾವಣೆಯಲ್ಲಿ ಮತದಾನ ಮಾಡುವ ಮತದಾರರಿಗೆ ಸಂಬಂಧಿಸಿದ್ದೇ ಹೊರತು ರಾಜ್ಯಸಭೆಯಂಥ ಚುನಾವಣೆಗೆ ಇದು ಸೂಕ್ತವಲ್ಲ.
ನವದೆಹಲಿ: ರಾಜ್ಯಸಭಾ ಚುನಾವಣೆಯಲ್ಲಿ ನೋಟಾ(None of the above) ಚಲಾವಣೆಗೆ ಅವಕಾಶವಿಲ್ಲ ಎಂಬ ಮಹತ್ವದ ಆದೇಶವನ್ನು ಸುಪ್ರೀಂ ಕೋರ್ಟ್ ನೀಡಿದೆ.
ರಾಜ್ಯಸಭಾ ಚುನಾವಣೆಯ ಬ್ಯಾಲೆಟ್ ಪೇಪರ್ ನಲ್ಲಿ ನೋಟಾ ಆಯ್ಕೆಗಾಗಿ ಅನುಮತಿ ನೀಡಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿರುವ ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ, ಜಸ್ಟೀಸ್ ಎಎಂ ಖಾನ್ ವಿಲ್ಕರ್ ಮತ್ತು ಜಸ್ಟೀಸ್ ಡಿವೈ ಚಂದ್ರಚೂಡ್ ಅವರ ತ್ರಿಸದಸ್ಯ ಪೀಠವು ನೋಟಾ ಆಯ್ಕೆ ನೇರ ಅಂದರೆ ಲೋಕಸಭಾ, ವಿಧಾನಸಭಾ ಮತ್ತು ಸ್ಥಳೀಯ ಚುನಾವಣೆಯಲ್ಲಿ ಮತದಾನ ಮಾಡುವ ಮತದಾರರಿಗೆ ಸಂಬಂಧಿಸಿದ್ದೇ ಹೊರತು ರಾಜ್ಯಸಭೆಯಂಥ ಚುನಾವಣೆಗೆ ಇದು ಸೂಕ್ತವಲ್ಲ ಎಂದು ಸ್ಪಷ್ಟಪಡಿಸಿದೆ.
ಗುಜರಾತಿನಲ್ಲಿ 2017 ರಲ್ಲಿ ನಡೆದ ರಾಜ್ಯಸಭೆ ಚುನಾವಣೆಯ ಸಮಯದಲ್ಲಿ ನೋಟಾ ಆಯ್ಕೆಯನ್ನು ಬಳಸಲು ಚುನಾವಣಾ ಆಯೋಗ ಅನುಮತಿ ನೀಡಿತ್ತು. ರಾಜ್ಯಸಭಾ ಚುನಾವಣೆಯಲ್ಲಿ ನೋಟಾಗೆ ಅವಕಾಶ ಕೊಟ್ಟರೆ, ಕುದುರೆ ವ್ಯಾಪಾರ ಮತ್ತು ಭ್ರಷ್ಟಾಚಾರಕ್ಕೆ ಉತ್ತೇಜನ ಕೊಟ್ಟಂತೆ ಎಂದು ಆರೋಪಿಸಿದ್ದ ಕಾಂಗ್ರೆಸ್ ಮುಖಂಡ ಶೈಲಶ್ ಮನುಭಾಯಿ ಪರ್ಮಾರ್ ಚುನಾವಣಾ ಆಯೋಗದ ಪ್ರಕಟಣೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ತೀರ್ಪು ಪ್ರಕಟಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





