ಬೆಂಗಳೂರು: ಬಯಲು ರಂಗಮಂದಿರ ನಿರ್ಮಾಣ ವಿವಾದಕ್ಕೆ ಸಂಬಂಧಿಸಿದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಟಿ ಭಾವನಾ ಅವರಿಗೆ ನೋಟಿಸ್ ಜಾರಿ ಮಾಡಿದೆ.
ಸರ್ಕಾರಿ ಕಲಾ ಕಾಲೇಜು ಆವರಣದ ಬಳಿ ಬಯಲು ರಂಗಮಂದಿರ ನಿರ್ಮಾಣಕ್ಕೆ ಹೂವು ಪೌಂಢೇಷನ್ ಗೆ ನೀಡಿರುವ 60 ಲಕ್ಷ ರೂಪಾಯಿ ಅನುದಾನ ಬಳಕೆ ಬಗ್ಗೆ ಮಾಹಿತಿ ನೀಡುವಂತೆ ನಟಿ ಭಾವನಾ ರಾಮಣ್ಣ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೋಟಿಸ್ ನೀಡಿದ್ದು, ಹಣದ ಸದ್ಭಳಕೆ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಸೂಚನೆ ನೀಡಿದೆ.
ಈ ಹಿಂದೆ ಭಾವನಾ ರಾಮಣ್ಣ ನಡೆಸುತ್ತಿರುವ ಹೂವು ಟ್ರಸ್ಟ್’ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹಣ ಬಿಡುಗಡೆ ಮಾಡಿತ್ತು. ಆದರೆ ರಂಗಮಂದಿರ ನಿರ್ಮಾಣ ವಿವಾದಕ್ಕೊಳಪಟ್ಟ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಭಾವನಾ ರಾಮಣ್ಣ, ಹಿಂದಿನ ಸರ್ಕಾರ ಕಾಮಗಾರಿ ಮಂಜೂರು ಮಾಡಿದ್ದು, ಇದಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 60 ಲಕ್ಷ ಬಿಡುಗಡೆಯಾಗಿತ್ತು ಎಂದು ಹೇಳಿದ್ದರು.
ಇದಕ್ಕೆ ಪ್ರತಿಕ್ರಿಯಿಸಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಾಂಸ್ಕೃತಿಕ ಚಟುವಟಿಕೆಗಳಿಗಾಗಿ ಹಣ ಬಿಡುಗಡೆ ಮಾಡಲಾಗಿದೆಯೇ ಹೊರತು ಯಾವುದೇ ಕಟ್ಟಡ ಅಥವಾ ಯೋಜನೆಗೆ ಹಣ ಬಿಡುಗಡೆ ಮಾಡಿಲ್ಲ ಎಂದು ಹೇಳಿದ್ದು, ಒಂದು ವೇಳೆ ಆ ಹಣವನ್ನು ಬೇರೆ ಉದ್ದೇಶಕ್ಕೆ ಬಳಸಿಕೊಂಡಿದ್ದರೆ ಹಣವನ್ನು ವಾಪಸ್ ಪಡೆಯಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





