ಬೆಂಗಳೂರು: ಉತ್ತರ ಕರ್ನಾಟಕ ಭಾಗವನ್ನು ಕಡೆಗಣಿಸುತ್ತಿದ್ದಾರೆಂಬ ಆರೋಪಗಳು ಕೇಳಿ ಬಂದಿರುವ ಬೆನ್ನಲ್ಲೇ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಉತ್ತರ ಕರ್ನಾಟಕ ಪ್ರವಾಸ ಕೈಗೊಳ್ಳಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.
ಅಧಿಕೃತ ನಿವಾಸ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಕುಮಾರಸ್ವಾಮಿಯವರು, ಸೆ.10-15ರವರೆಗೂ ಉತ್ತರ ಕರ್ನಾಟಕ ಪ್ರವಾಸ ಕೈಗೊಳ್ಳುತ್ತೇನೆಂದು ಕುಮಾರಸ್ವಾಮಿಯವರು ಹೇಳಿದ್ದಾರೆ.
ರಾಜ್ಯ ಬಜೆಟ್ ನಲ್ಲಿ ಉತ್ತರ ಕರ್ನಾಟಕ ಭಾಗವನ್ನು ಕಡೆಗಣಿಸಲಾಗಿದ್ದು, ಸರ್ಕಾರ ಅಧಿಕಾರಕ್ಕೆ ಬಂದರೂ ಉತ್ತರ ಕರ್ನಾಟಕಕ್ಕೆ ಒಂದು ಬಾರಿಯಾದರೂ ಕುಮಾರಸ್ವಾಮಿಯವರು ಭೇಟಿ ನೀಡಿಲ್ಲ ಎಂಬ ಮಾತುಗಳು ಕೇಳಿ ಬಂದಿದ್ದವು. ಇದಲ್ಲದೆ, ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಕಚೇರಿಯನ್ನು ಬೆಳಗಾವಿಯಿಂದ ಹಾಸನಕ್ಕೆ ಸ್ಥಳಾಂತರ ಮಾಡಿದ್ದರ ಕುರಿತಂತೆಯೂ ಜನರು ಕೆಂಡಾಮಂಡಲಗೊಂಡಿದ್ದರು.
ಈ ಎಲ್ಲಾ ಆರೋಪಗಳ ಬೆನ್ನಲ್ಲೇ ಉತ್ತರ ಕರ್ನಾಟಕ ಪ್ರವಾಸ ಕೈಗೊಳ್ಳುವುದಾಗಿ ತಿಳಿಸಿರುವ ಕುಮಾರಸ್ವಾಮಿ, ಇನ್ನು ಮುಂದೆ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲನೆ ನಡೆಸಲು ಪ್ರತೀ ವಾರ ಒಂದೊಂದು ಜಿಲ್ಲೆಗಳಿಗೆ ಭೇಟಿ ನೀಡುತ್ತೇನೆ ಹಾಗೂ ವಿಧಾನಸೌಧದಲ್ಲಿ ಒಂದು ದಿನ ಇರುತ್ತೇನೆಂದು ತಿಳಿಸಿದ್ದಾರೆ.
ಗ್ರಾಮ ವಾಸ್ತವ್ಯವಿಲ್ಲ
ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಆರಂಭಿಸಿದ್ದ ಜನತಾ ದರ್ಶನ ಕಾರ್ಯಕ್ರಮವನ್ನು ಇಂದು ಅಧಿಕೃತವಾಗಿ ಮತ್ತೆ ಆರಂಭಿಸಿದ್ದೇನೆ. ಇನ್ನು ಮುಂದೆ ಬೆಂಗಳೂರಿನಲ್ಲಿದ್ದಾಗ ಪ್ರತಿ ಶನಿವಾರ ಜನತಾ ದರ್ಶನ ನಡೆಸುತ್ತೇನೆದ. ನನ್ನ ದಿನಚರಿಯನ್ನು ಬದಲಾಯಿಸಿಕೊಳ್ಳುತ್ತೇನೆ.
ವಾರದಲ್ಲಿ ಒಂದು ದಿನ ವಿಧಾನಸೌಧದಲ್ಲಿ ಇಲಾಖಾವಾರು ಪ್ರಗತಿ ಪರಿಶೀಲನೆ ಸಭೆ ನಡೆಸುತ್ತೇನೆ. ತಿಂಗಳಲ್ಲಿ ಒಂದು ದಿನ ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಶೀಲನೆ ನಡೆಸುತ್ತೇನೆ. ಗ್ರಾಮ ವಾಸ್ತವ್ಯ ಮಾಡಬೇಕು ಅಂದುಕೊಂಡಿದ್ದೇನೆ. ಆದರೆ, ಇದಕ್ಕೆ ನನ್ನ ವೈದ್ಯರೂ ಇನ್ನೂ ಅನುಮತಿ ಕೊಟ್ಟಿಲ್ಲ. ವೈದ್ಯರು ಅನುಮತಿ ಕೊಟ್ಟರೆ ಗ್ರಾಮ ವಾಸ್ತವ್ಯದ ಬಗ್ಗೆ ಆಲೋಚನೆ ನಡೆಸುತ್ತೇನೆಂದಿದ್ದಾರೆ
bigtvnews | Hubli Dharwad News | Kannada News | Karnataka News Hubli News | News In Hubli | Local news





