ಬೆಂಗಳೂರು: ಇವತ್ತಿನ ರಾಜಕೀಯ ಬೆಳವಣಿಗೆಗಳನ್ನ ನೋಡಿದ್ರೆ ಬಹುಶಃ ಸಮ್ಮಿಶ್ರ ಸರ್ಕಾರದ ಬುಡ ಮತ್ತಷ್ಟು ಅಲುಗಾಡುತ್ತಿದ್ದಂತೆ ಕಾಣುತ್ತಿದೆ. ಇದಕ್ಕೆ ಮುಲಾಮು ಹಚ್ಚಿಸಲು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ ಮುಂದಾಗಿದ್ದು, ಅತೃಪ್ತ ಶಾಸಕರ ಜೊತೆ ಚರ್ಚೆ ನಡೆಸಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.
ಸಚಿವ ಸ್ಥಾನಕ್ಕಾಗಿ ಪಟ್ಟು ಹಿಡಿದು ಚೆನ್ನೈಗೆ ಪ್ರಯಾಣ ಬೆಳೆಸಿದ್ದಾರೆ ಎನ್ನಲಾಗಿರುವ ಮೂವರು ಶಾಸಕರ ಜೊತೆ ಸಿದ್ದರಾಮಯ್ಯ ಫೋನ್ ಮಾಡಿ ಮಾತುಕತೆ ನಡೆಸಿದ್ದಾರೆ. ಕಾಂಗ್ರೆಸ್ ಶಾಸಕರಾದ ಡಾ. ಸುಧಾಕರ್, ಎಂಟಿಬಿ ನಾಗರಾಜ್ ಹಾಗೂ ಕಾಂಗ್ರೆಸ್ ಬೆಂಬಲಿತ ಪಕ್ಷೇತರ ಶಾಸಕ ನಾಗೇಶ್ ಜೊತೆ ಸಿದ್ದಾರಮಯ್ಯ ಮಾತುಕತೆ ನಡೆಸಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.
ಹಾಗೇ ಈ ಮೂವರೂ ಶಾಸಕರಿಗೆ ಮತ್ತೆ ಬೆಂಗಳೂರಿಗೆ ವಾಪಸ್ ಬರುವಂತೆ ಖಡಕ್ ಸೂಚನೆ ನೀಡಿದ್ದಾರಂತೆ. ನಿಮ್ಮ ನಡೆಯಿಂದ ಬೇರೆ ರೀತಿಯ ಸಂದೇಶ ರವಾನೆಯಾಗುತ್ತಿದೆ. ಕೂಡಲೇ ಬೆಂಗಳೂರಿಗೆ ವಾಪಸ್ ಬಂದು, ತಮ್ಮನ್ನು ಭೇಟಿಯಾಗುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಅಷ್ಟಕ್ಕೂ ಸುಮ್ಮನಿರದ ಸಿದ್ದರಾಮಯ್ಯ, ಉಳಿದ ಅತೃಪ್ತ ಶಾಸಕರ ಜೊತೆಯೂ ಚರ್ಚೆ ನಡೆಸಿದ್ದಾರಂತೆ. ಸಿದ್ದರಾಮಯ್ಯ ನಡೆಸಿದ ಮಾತುಕತೆ ವೇಳೆ ಯಾವುದೇ ಕಾರಣಕ್ಕೂ ಪಕ್ಷ ಬಿಡುವಂಥ ತೀರ್ಮಾನ ಮಾಡಬೇಡಿ ಅಂತಾ ಕಿವಿಮಾತು ಹೇಳಿದ್ದಾರೆ ಎನ್ನಲಾಗಿದೆ. ಅದಕ್ಕೆ ಅತೃಪ್ತ ಶಾಸಕರು ಯಾವುದೇ ಕಾರಣಕ್ಕೂ ಪಕ್ಷ ಬಿಡಲ್ಲ ಅಂತಾನೂ ಭರವಸೆ ನೀಡಿದ್ದಾರೆ ಅನ್ನೋ ಮಾಹಿತಿ ಕೂಡ ಲಭ್ಯವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





