ಶಿವಮೊಗ್ಗ: ಶಿವಮೊಗ್ಗ-ಚಿಕ್ಕಮಗಳೂರು ಜಿಲ್ಲೆಗಳ ಗಡಿ ಭಾಗದಲ್ಲಿರುವ ಭದ್ರಾ ಜಲಾಶಯದ ಸುತ್ತಮುತ್ತಲ ಪ್ರದೇಶವನ್ನು ಪ್ರವಾಸಿ ತಾಣವಾಗಿ ಮಾರ್ಪಡಿಸಲು ಸರ್ಕಾರ ₹ 13 ಕೋಟಿ ಮಂಜೂರು ಮಾಡಿದೆ ಅಂತಾ ಪ್ರವಾಸೋದ್ಯಮ, ರೇಷ್ಮೆ ಸಚಿವ ಸಾ.ರಾ.ಮಹೇಶ್ ಹೇಳಿದ್ದಾರೆ.
ಭದ್ರಾ ಜಲಾಶಯ ಹಾಗೂ ಜಿಲ್ಲೆಯಲ್ಲಿ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಬಹುದಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿದ ಅವರು, ಇಲ್ಲಿರುವ 182 ಎಕರೆ ಪ್ರದೇಶದಲ್ಲಿ 105 ಎಕರೆ ಭೂಮಿಯನ್ನು ಅಭಿವೃದ್ಧಿಪಡಿಸಲು ಕಾಯ್ದಿರಿಸಲಾಗಿದೆ. ಅಲ್ಲದೇ ಖಾಸಗಿ ಸಂಸ್ಥೆಯ ಸಹಭಾಗಿತ್ವದಲ್ಲಿ ಅಂದಾಜು ₹ 100 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲು ಕ್ರಿಯಾ ಯೋಜನೆಯನ್ನು ತಯಾರಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಈಗಾಗಲೆ ಬಿಡುಗಡೆಯಾಗಿರುವ ಅನುದಾನವನ್ನು ಬಳಸಿಕೊಂಡು ಅತ್ಯಲ್ಪ ಅವಧಿ ಅಂದರೆ 8-10 ತಿಂಗಳೊಳಗಾಗಿ ಕೈಗೊಂಡ ಕಾಮಗಾರಿಯನ್ನು ಪೂರ್ಣಗೊಳಿಸಲು ಸೂಚಿಸಲಾಗಿದೆ. ಇದು ಮುಖ್ಯಮಂತ್ರಿಯ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಪ್ರವಾಸಿ ಕ್ಷೇತ್ರಗಳ ಅಭಿವೃದ್ದಿಗೆ ಸರ್ಕಾರದಿಂದ ಅಗತ್ಯ ನೆರವು ನೀಡಲಾಗುವುದು ಎಂದರು.
ಅಲ್ಲದೇ ಪ್ರಸ್ತುತ ಬಿಆರ್ಪಿ ಜಂಗಲ್ ರೆಸಾರ್ಟ್ಗೆ 23 ಎಕರೆ ಪ್ರದೇಶವನ್ನು ನಿಗದಿಪಡಿಸಲಾಗಿದೆ. ಇದರೊಂದಿಗೆ ಶಿವಮೊಗ್ಗದ ಶಿವಪ್ಪನಾಯಕನ ಬೇಸಿಗೆ ಅರಮನೆ, ಕೋಟೆ ದೇವಸ್ಥಾನ, ಜೋಗ ಹಾಗೂ ಜಿಲ್ಲೆಯ ಮತ್ತಿತರ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲು ಕೈಗೊಳ್ಳಬಹುದಾದ ಯೋಜನೆಗಳ ಕುರಿತು ಖುದ್ದು ಸ್ಥಳಕ್ಕೆ ಭೇಟಿ ನೀಡಿ, ಅಧಿಕಾರಿಗಳಿಂದ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಇತ್ತೀಚೆಗೆ ರಾಜ್ಯದ ಕೊಡಗು ಜಿಲ್ಲೆಯಲ್ಲಿ ಬಿದ್ದ ಭಾರೀ ಮಳೆಯಿಂದಾಗಿ ಸುಮಾರು ₹ 4 ಸಾವಿರ ಕೋಟಿ ಆರ್ಥಿಕ ನಷ್ಟ ಸಂಭವಿಸಿರುವ ಬಗ್ಗೆ ಮಾಹಿತಿ ಇದೆ. ಈ ಪ್ರದೇಶದ ಸಂತ್ರಸ್ಥರ ನೆರವಿಗೆ ಅಗತ್ಯವಿರುವ ಎಲ್ಲಾ ರೀತಿಯ ಪರಿಹಾರ ಕಾರ್ಯಗಳನ್ನು ಕೈಗೊಂಡಿದೆ. ಆದರೂ ಕೇಂದ್ರ ಸರ್ಕಾರವೂ ಕೂಡ ರಾಷ್ಟ್ರೀಯ ವಿಪತ್ತು ನೀತಿ-ನಿಯಮಗಳನ್ನು ಸಡಿಲಿಸಿ, ವಿಶೇಷ ಪ್ರಕರಣವೆಂದು ಭಾವಿಸಿ ಹೆಚ್ಚಿನ ಪರಿಹಾರ ನೀಡಿ ಕೊಡಗಿನ ಪುನರ್ನಿರ್ಮಾಣ ಕಾರ್ಯಕ್ಕೆ ಸಹಕಾರ ನೀಡುವಂತೆ ಪ್ರಧಾನ ಮಂತ್ರಿಗೆ ಮನವಿ ಮಾಡಲಾಗಿದೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





