ಬೆಂಗಳೂರು: ಕೇಂದ್ರ ಸಚಿವ ಅನಂತ ಕುಮಾರ್ ವಿಧಿವಶರಾಗಿದ್ದಾರೆ. ಇಂದು ಬೆಳಗಿನ ಜಾವ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಂತ ಕುಮಾರ್ ಕೊನೆಯುಸಿರೆಳೆದಿದ್ದಾರೆ. ಕ್ಯಾನ್ಸರ್ನಿಂದ ಬಳಲುತ್ತಿದ್ದ ಅನಂತ ಕುಮಾರ್ ಕಳೆದ ಕೆಲ ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ, ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ 3.30ರ ಸುಮಾರಿಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.59 ವರ್ಷದ ಅನಂತ ಕುಮಾರ್, ಬೆಂಗಳೂರು ದಕ್ಷಿಣ ಕ್ಷೇತ್ರದಿಂದ 7 ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಸದ್ಯ ನರೇಂದ್ರ ಮೋದಿ ಸಂಪುಟದಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾಗಿ ಅವರು ಕಾರ್ಯ ನಿರ್ವಹಿಸ್ತಿದ್ರು. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಅನಂತಕುಮಾರ್, ಅವರ ಸರ್ಕಾರದಲ್ಲೂ ನಾಗರಿಕ ವಿಮಾನಯಾನ ಖಾತೆ ಸಚಿವರಾಗಿದ್ದರು. ಅಲ್ಲದೆ, ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಉಂಟಾದ ಗೊಂದಲದ ಸಮಯದಲ್ಲಿ ಅನಂತ ಕುಮಾರ್ ಸಿಎಂ ರೇಸ್ನಲ್ಲೂ ಇದ್ದರು.ಸದ್ಯ ಶ್ರೀ ಶಂಕರ ಆಸ್ಪತ್ರೆಯಿಂದ ಅನಂತ ಕುಮಾರ್ ಪಾರ್ಥಿವ ಶರೀರವನ್ನ ಬಸವನಗುಡಿಯ ಅವರ ಸ್ವಗೃಹಕ್ಕೆ ರವಾನಿಸಲು ಸಿದ್ಧತೆಗಳನ್ನ ಮಾಡಿಕೊಳ್ಳಲಾಗ್ತಿದೆ. ಅಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡುವ ಸಾಧ್ಯತೆ ಇದೆ. ಅನಂತ ಕುಮಾರ್ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೇರಿದಂತೆ ಹಲವು ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ. ಅನಂತ ಕುಮಾರ್ ನಿಧನದಿಂದಾಗಿ ರಾಜ್ಯ ಬಿಜೆಪಿ ನಾಯಕರು ಬೆಂಗಳೂರಿಗೆ ಮರಳುತ್ತಿದ್ದಾರೆ. ಇಂದು ಸಂಜೆ ಬೆಂಗಳೂರಿನ ಟಿ.ಆರ್. ಮಿಲ್ ಬಳಿ ಅನಂತ ಕುಮಾರ್ ಅಂತ್ಯಕ್ರಿಯೆ ನಡೆಯುವ ಸಾಧ್ಯತೆ ಇದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





