ಹೈಸ್ಕೂಲ್ ಶಿಕ್ಷಕಿ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ಮಾಡಿ ಕೊಲೆ ಮಾಡಿದ್ದು, ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಾಳಲೆ ಗ್ರಾಮದಲ್ಲಿ ನಡೆದಿದೆ. ಬಾಳೆಲೆ ಗ್ರಾಮದ ಆಶಾ ಕಾವೇರಮ್ಮ(50) ಮೃತ ಶಿಕ್ಷಕಿ. ಜಗದೀಶ್(60) ಆತ್ಮಹತ್ಯೆಗೆ ಶರಣಾದ ಆರೋಪಿ. ಮೃತ ಶಿಕ್ಷಕಿ ಇಂದು ಬೆಳಗ್ಗೆ 8.15ರ ಸುಮಾರಿಗೆ ಶಾಲಾ ವಾಹನಕ್ಕಾಗಿ ಕಾಯುತ್ತಿದ್ದ ವೇಳೆ ಶಿಕ್ಷಕಿಯ ಮೇಲೆ ಪೊನ್ನಂಪೇಟೆ ನಿವಾಸಿ ಜಗದೀಶ್ ಐದು ಬಾರಿ ಗುಂಡು ಹಾರಿಸಿದ್ದಾನೆ. ಪರಿಣಾಮ ಶಿಕ್ಷಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬಳಿಕ ಆರೋಪಿ ಕೂಡ ಕಾಫಿ ತೋಟದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇತ್ತ ಗುಂಡಿನ ದಾಳಿಯ ವೇಳೆ ಶಿಕ್ಷಕಿಯ ರಕ್ಷಣೆಗೆ ಮುಂದಾದ ವಿದ್ಯಾರ್ಥಿ ಮತ್ತು ತೋಟದ ಕಾರ್ಮಿಕನ ಕೈಗೆ ಗುಂಡು ತಗುಲಿದ್ದು, ಗಂಭೀರ ಗಾಯಗೊಂಡಿದ್ದರು. ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಗುಂಡಿಕ್ಕಿದಾತ ಶಿಕ್ಷಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದನು ಎಂದು ತಿಳಿದು ಬಂದಿದೆ. ಆಶಾ ಅವರು ಗೋಣಿಕೊಪ್ಪಲು ಲಯನ್ಸ್ ಹೈಸ್ಕೂಲ್ ಶಾಲೆಯ ಶಿಕ್ಷಕಿಯಾಗಿದ್ದರು. ಶಿಕ್ಷಕಿ ಮೇಲೆ ಜಗದೀಶ್ ಕಣ್ಣು ಹಾಕಿದ್ದನು. ಪತಿ ಇಲ್ಲದ ಆಶಾಗೆ ಪತ್ನಿ ಇಲ್ಲದ ಜಗದೀಶ್ ಲೈಂಗಿಕ ಕಿರುಕುಳ ನೀಡುತ್ತಿದ್ದನು. ಎರಡು ವರ್ಷಗಳಿಂದ ಇದೇ ವಿಚಾರಕ್ಕೆ ಇಬ್ಬರ ನಡುವೆ ಜಗಳವಾಗಿತ್ತು. ಅಷ್ಟೇ ಅಲ್ಲದೆ ಎರಡು ವರ್ಷದ ಹಿಂದಷ್ಟೇ ಅತ್ಯಾಚಾರ ಯತ್ನದ ಬಗ್ಗೆ ಜಗದೀಶ್ ವಿರುದ್ಧ ಶಿಕ್ಷಕಿ ಆಶಾ ದೂರು ನೀಡಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





