
ಬೆಳಗಾವಿ: ಬೆಳಗಾವಿ ನಗರದ ಹೊರವಲಯದಲ್ಲಿ ಉದ್ದೇಶಿತ ಹಲಗಾ – ಮಚ್ಛೆ ಬೈಪಾಸ್ ರಸ್ತೆ ಕಾಮಗಾರಿಗೆ ಭಾರಿ ವಿರೋಧ ವ್ಯಕ್ತವಾಗಿದೆ. ಕಾಮಗಾರಿ ವಿರೋಧಿಸಿ ನಡೆದ ಪ್ರತಿಭಟನೆಯ ವೇಳೆ ರೈತನ ಮಗನೊಬ್ಬ ಮರವೇರಿ ಆತ್ಮಹತ್ಯೆ ಬೆದರಿಕೆ ಹಾಕಿದರೆ, ಇನ್ನೊಬ್ಬ ರೈತ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಘಟನೆ ನಡೆದಿದೆ. ಅಲ್ಲದೇ, ಇನ್ನೊಬ್ಬ ರೈತ ಕೈಯಲ್ಲಿ ಕುಡುಗೋಲು ಹಿಡಿದು ಕತ್ತು ಕುಯ್ದುಕೊಳ್ಳಲು ಯತ್ನಿಸಿದ್ದಾನೆ.
ಹಲಗಾ- ಮಚ್ಛೆ ಬೈಪಾಸ್ ರಸ್ತೆ ಕಾಮಗಾರಿ ಆರಂಭಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದ ವೇಳೆ ರೈತರು ಕಾಮಗಾರಿ ಆರಂಭಕ್ಕೆ ವಿರೋಧ ವ್ಯಕ್ತಪಡಿಸಿದರು. ರಸ್ತೆ ನಿರ್ಮಾಣಕ್ಕೆ ಈ ಮೊದಲು ಸರ್ವೇ ಮಾಡಿದ ಜಮೀನು ಅಲ್ಲದೇ ಫಲವತ್ತಾದ ಕೃಷಿ ಭೂಮಿಯನ್ನೂ ವಶಕ್ಕೆ ಪಡೆಯಲಾಗಿದೆ ಎಂದು ರೈತರು ಆರೋಪಿಸಿದರು.
ಕೃಷಿ ಭೂಮಿ ಒತ್ತುವರಿ ಆರೋಪ
ಈ ವೇಳೆ, ರೈತನ ಪುತ್ರನೊಬ್ಬ ರಸ್ತೆ ಕಾಮಗಾರಿ ಆರಂಭಿಸಿದರೆ ಮರದ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳುವೆ ಎಂದು ಮರವೇರಿ ಬೆದರಿಕೆ ಹಾಕಿದ್ದಾನೆ. ಅಲ್ಲದೇ, ರಸ್ತೆ ನಿರ್ಮಾಣಕ್ಕೆ ಈ ಮೊದಲು ನಡೆಸಿದ ಸರ್ವೇಯಲ್ಲಿ ನಮ್ಮ ಜಮೀನು ಇರಲಿಲ್ಲ. ಈಗ ಕೃಷಿ ಭೂಮಿಯಲ್ಲಿ ರಸ್ತೆ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ರಸ್ತೆ ನಿರ್ಮಾಣ ಕೈಬಿಡಬೇಕು ಎಂದು ಪಟ್ಟು ಹಿಡಿದಿದ್ದಾನೆ.
ಪೆಟ್ರೋಲ್ ಸುರಿದುಕೊಂಡು ರೈತ ಆತ್ಮಹತ್ಯೆಗೆ ಯತ್ನ
ಈ ವೇಳೆ, ಇನ್ನೊಬ್ಬ ರೈತ ಆಕಾಶ್ ಅನಗೋಳಕರ್ ಎಂಬುವವರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ತಕ್ಷಣವೇ ಪೊಲೀಸರು ರೈತನನ್ನು ರಕ್ಷಿಸಿದ್ದಾರೆ. ಅದೃಷ್ಟವಶಾತ್ ರೈತ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನೊಬ್ಬ ರೈತ ಕೈಯಲ್ಲಿ ಕುಡುಗೋಲು ಹಿಡಿದು ಪೊಲೀಸರ ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆತನ ಕೈಯಿಂದ ಕುಡುಗೋಲು ಪಡೆಯಲು ಪೊಲೀಸರು ಹರಸಾಹಸಪಟ್ಟರು.
ಕಾಮಗಾರಿ ನಿಲ್ಲಿಸಬೇಕು ಎಂದು ಆಗ್ರಹಿಸಿ ರೈತರು ಸೇರಿದಂತೆ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವ ವೇಳೆ ಮಹಿಳೆಯರು ಪೊಲೀಸರ ಮಧ್ಯೆ ತಿಕ್ಕಾಟ, ವಾಗ್ವಾದ ನಡೆದಿದೆ. ಕಣ್ಣೀರಿಡುತ್ತಲೇ ರೈತ ಮಹಿಳೆಯರು ಪೊಲೀಸರಿಗೆ ಹಿಡಿಶಾಪ ಹಾಕಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನೂರಾರು ಪೊಲೀಸರ ಭದ್ರತೆ ಪಡೆದುಕೊಂಡು ಕಾಮಗಾರಿ ಆರಂಭಿಸಿದ್ದಾರೆ ಎನ್ನಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

