ಹುಬ್ಬಳ್ಳಿ: ಯಾವುದೇ ಚುನಾವಣೆಯನ್ನು ಕಣ್ಮುಂದೆ ಇಟ್ಟುಕೊಂಡು ಈ ರೀತಿ ತೀರ್ಮಾನ ಮಾಡಿಲ್ಲ.
ನಮ್ಮ ಕಾಯ್ದೆಯಲ್ಲಿ ಲೋಪದೋಷ ಇಲ್ಲ ಅಂತ ಹೇಳಿದ್ದು, ನಿಜ. ಆದರೆ ರೈತರ ಹಿತಕ್ಕಾಗಿ ಕೃಷಿ ಕಾಯಿದೆ ನಿಷೇಧ ಮಾಡಲಾಗಿದೆ. ಇದರಲ್ಲಿ ಸೋಲು ಗೆಲುವು ಪ್ರಶ್ನೆ ಇಲ್ಲ, ಇದು ಉತ್ತಮ ನಿರ್ಧಾರ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಕೇಂದ್ರ ಸರ್ಕಾರ ಕೃಷಿ ಕಾಯಿದೆ ಹಿಂಪಡೆದ ಹಿನ್ನೆಲೆಯಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ಐತಿಹಾಸಿಕ ತೀರ್ಮಾನವನ್ನು ಈಗ ತೆಗೆದುಕೊಂಡಿದ್ದಾರೆ. ರೈತ ಸಮೂಹಕ್ಕೆ ಒಂದು ಒಳ್ಳೆಯ ತೀರ್ಮಾನದ ಮೂಲಕ ಖುಷಿ ಕೊಟ್ಟಿದ್ದಾರೆ. ಕೃಷಿ ಕಾಯ್ದೆ ಹೋರಾಟದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತೇವೆ ಎಂದರು.
ಚುನಾವಣೆ ಆಧಾರದ ಮೇಲೆ ಈ ನಿರ್ಧಾರ ಕೈಗೊಂಡಿಲ್ಲ.
ಆ ಸಂದರ್ಭದಲ್ಲಿ ಏನೆಲ್ಲಾ ಆಯ್ತು ಎನ್ನುವುದು ಬೇರೆ.
ಆದರೆ ಒಣ ಪ್ರತಿಷ್ಠೆಗೆ ಒಳಗಾಗದೆ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಬಿಟ್ ಕಾಯಿನ್ ವಿಚಾರವಾಗಿ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿ ಸೇರಿದಂತೆ ಪ್ರಧಾನಿ ಸಹ ಹೇಳಿದ್ದಾರೆ. ಇದೊಂದು ಅಕ್ಷಮ್ಯ ಅಪರಾಧ, ಯಾರೇ ತಪ್ಪು ಮಾಡಿದ್ದರೂ, ಅವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಅವರು ಹೇಳಿದರು.
ಬಿ.ಎಸ್.ವೈ ರಾಜಕೀಯಕ್ಕೆ ಕಡಿವಾಣ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಯಾವುದೇ ಕಡಿವಾಣ ನನಗೆ ಹಾಕಿಲ್ಲ. ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಕ್ಕೆ ಹಿಂದೆ ಮುಂದೆ ನೋಡುತ್ತಾರೆ. ಆದರೆ ನಾನು ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿ ಬಂದಿದ್ದೇನೆ. ರಾಜ್ಯದ ಉದ್ದಗಲಕ್ಕೂ ಸಹ ಪ್ರವಾಸ ಮಾಡುತ್ತಿದ್ದೇನೆ. ಎಲ್ಲಿಯೇ ಹೋದರೂ ನಮ್ಮ ಯಡಿಯೂರಪ್ಪ ಅಂತ ಅಭಿಮಾನ ತೋರಿಸುತ್ತಿದ್ದಾರೆ ಎಂದು ಅವರು ಹೇಳಿದರು.
ರೈತರ ಬೆಳೆಹಾನಿ ಕುರಿತು ಮಾತನಾಡಿದ ಅವರು, ಇತ್ತೀಚೆಗೆ ಮಳೆಯಿಂದಾಗಿ ರೈತರ ಬೆಳೆ ಸಂಪೂರ್ಣ ನಾಶವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ಪರವಾಗಿದೆ. ಅವರ ಸಂಕಷ್ಟಕ್ಕೆ ನಾವು ಸಹ ಸಹಕರಿಸಲಿದ್ದೇವೆ. ಈ ಮಳೆಯ ಅಬ್ಬರದಿಂದ ಬಹಳ ದೊಡ್ಡ ಪ್ರಮಾಣದಲ್ಲಿ ಸಮಸ್ಯೆಯಾಗಿದೆ. ಬೆಂಗಳೂರು ಸೇರಿದಂತೆ ಎಲ್ಲ ಕಡೆ ಇದೆ ಪರಸ್ಥಿತಿ ಇದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

