Breaking News

ಕನ್ನಡದ ಹಿರಿಯ ನಟ ಶಿವರಾಂ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸ್ಯಾಂಡಲ್‍ವುಡ್‍ನ ‘ಶಿವರಾಮಣ್ಣ’ ಎಂದೇ ಖ್ಯಾತರಾಗಿದ್ದ ಶಿವರಾಂ ಇಂದು ನಿಧನ ಹೊಂದಿದ್ದಾರೆ.

ಕೆಲವು ದಿನಗಳ ಹಿಂದೆ ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ತೆರಳಿದ್ದರು. ನಂತರ ಮನೆಯಲ್ಲಿ ಅಯ್ಯಪ್ಪ ಪೂಜೆ ಮಾಡುತ್ತಿದ್ದ ವೇಳೆ  ಕಾಲು ಜಾರಿ ಬಿದ್ದು ತಲೆಗೆ ಗಂಭೀರ ಗಾಯವಾಗಿ ವಿದ್ಯಾಪೀಠ ಸರ್ಕಲ್ ಬಳಿ ಇರುವ ಪ್ರಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬ್ರೇನ್ ಡ್ಯಾಮೇಜ್ ನಿಂದ ಕೋಮಾದಲ್ಲಿದ್ದರು.  ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಹೊಸಕೆರೆಹಳ್ಳಿಯ ಖಾಸಗಿ ಆಸ್ಪತ್ರೆಯಿಂದ ಬನಶಂಕರಿಗೆ ಮೃತದೇಹ ಕೊಂಡೊಯ್ಯಲು ಸಿದ್ದತೆ ನಡೆಸಲಾಗುತ್ತಿದೆ.  ಮನೆಯ ಬಳಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಅಂತ್ಯಕ್ರಿಯೆ ನಡೆಯಲಿದೆ.

ಶಿವರಾಂ ಅವರಿಗೆ 84 ವರ್ಷ ವಯಸ್ಸಾಗಿತ್ತು. ಆರು ದಶಕಗಳಿಂದ ಕನ್ನಡ ಸಿನಿಮಾ ರಂಗದ ನಂಟುಹೊಂದಿದ್ದಾರೆ. ಪುಟ್ಟಣ್ಣ ಕಣಗಾಲ್ ಗರಡಿಯಲ್ಲಿ ಪಳಗಿದ ಶಿವರಾಂ ನಾಯಕ ನಟರಾಗಿ, ಹಾಸ್ಯನಟ, ಪೋಷಕ ನಟ, ನಿರ್ಮಾಪಕರಾಗಿಯೂ ಹೆಸರು ಮಾಡಿದವರು. `ಶರಪಂಜರ’ ಶಿವರಾಂ ಎಂದೇ ಹೆಸರುವಾಸಿಯಾಗಿದ್ದರು `ಡ್ರೈವರ್ ಹನುಮಂತು’ ಸಿನಿಮಾದಲ್ಲಿ ನಾಯಕ ನಟರಾಗಿ ಹೆಚ್ಚು ಜನಪ್ರಿಯರಾಗಿದ್ದರು. ಡಾ.ರಾಜ್‍ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಪ್ರಣಯರಾಜ ಶ್ರೀನಾಥ್ ಅವರ ಜೊತೆಯಲ್ಲಿ ನಟಿಸಿದ್ದರು.

ಶಿವರಾಂ ಅಯ್ಯಪ್ಪನ ಪರಮಭಕ್ತರಾಗಿದ್ದು, ಇವರು ಗುರುಸ್ವಾಮಿಯೂ ಆಗಿದ್ದರು. 48 ವರ್ಷಗಳಿಂದ ಶಬರಿಮಲೆಗೆ ಹೋಗಿ ಬರುತ್ತಿದ್ದರು. ಈ ಬಾರಿಯೂ ಹೋಗಬೇಕೆಂದು ಅಂದುಕೊಂಡಿದ್ದರು. ಆದರೆ ಇದೀಗ ಶಿವರಾಂ ಕನ್ನಡ ಸಿನಿಪ್ರಿಯರನ್ನು ಬಿಟ್ಟು ಇಹಲೋಕ ತ್ಯಜಿಸಿದ್ದು, ಇವರ ಸಾವಿಗೆ ಇಡೀ ಕನ್ನಡ ಚಿತ್ರರಂಗ ಸಹಿತ ಹಲವು ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *