ಹುಬ್ಬಳ್ಳಿ: ಶಾಸಕರಾದವರಿಗೆ ಸಚಿವರಾಗುವ ಆಸೆ ಇದ್ದೆ ಇರುತ್ತದೆ. ಆದರೆ ನಾನಾಗಲೇ ಸಚಿವ ಸ್ಥಾನಕ್ಕಾಗಿ ಲಾಭಿ ಮಾಡುವುದಿಲ್ಲ. ಬದಲಾಗಿ ಪಕ್ಷ ಗುರುತಿಸಿ ಜವಾಬ್ದಾರಿ ನೀಡಿದರೆ ಸ್ವೀಕರಿಸುವೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.
ನಗರದ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಸಂಪುಟದ ವಿಸ್ತರಣೆ ಕುರಿತು ನನಗೆ ಮಾಹಿತಿ ಇಲ್ಲ. ಹಾಗೇನಾದರೂ ಸಂಪುಟ ವಿಸ್ತರಣೆ ಆದರೆ ನಾನು ಸಚಿವ ಸ್ಥಾನ ಕೇಳುವುದಿಲ್ಲ. ಈಗಾಗಲೇ ನಾನು ಶಾಸಕನಾಗಿ, ಜಿಲ್ಲಾಧ್ಯಕ್ಷನಾಗಿ ನೆಮ್ಮದಿಯಿಂದ ಇರುವೆ. ಹಾಗೇನಾದರೂ ಪಕ್ಷ ಜವಾಬ್ದಾರಿ ನೀಡಿದರೆ ಸಮರ್ಥವಾಗಿ ನಿಭಾಯಿಸುವೆ ಎಂದರು.
ಈಗಾಗಲೇ ಸಿಎಂ ಬದಲಾವಣೆ ವಿಚಾರವಾಗಿ ನಮ್ಮ ಪಕ್ಷದ ಹಿರಿಯರಾದ ಈಶ್ವರಪ್ಪ ಅವರು ತಮ್ಮ ಹೇಳಿಕೆಗೆ ಸ್ಪಷ್ಟೀಕರಣ ನೀಡಿದ್ದಾರೆ. ಸದ್ಯ ಬಸವರಾಜ ಬೊಮ್ಮಾಯಿ ಉತ್ತಮ ಆಡಳಿತ ನೀಡುತ್ತಿದ್ದಾರೆ. ಅವರೊಬ್ಬ ಪ್ರಬುದ್ಧ ರಾಜಕಾರಣಿ, ಆಡಳಿತದ ಬಗ್ಗೆ ಸಂಪೂರ್ಣ ಜ್ಞಾನ ಹೊಂದಿದ್ದಾರೆ. ಅವರ ನೇತೃತ್ವದಲ್ಲಿ ನಾವು ಕೆಲಸ ಮಾಡುತ್ತೇವೆ. ಹಾಗಾಗಿ ಮುಖ್ಯಮಂತ್ರಿ ಬದಲಾವಣೆ ವಿಚಾರ ನಮ್ಮ ಮುಂದೆ ಇಲ್ಲ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

