ಹುಬ್ಬಳ್ಳಿ: ಹರಿಯಾಣ ರಾಜ್ಯದ ಗುರಂಗಾವ್ ನಗರದಲ್ಲಿ ಮುಸ್ಲಿಂ ಸಮುದಾಯದವರಿಗೆ ಧಾರ್ಮಿಕ ಆಚರಣೆ ಮಾಡಲು, ನಮಾಜ್ ಮಾಡಲು ಹಾಗೂ ಮಸೀದಿಗಳನ್ನು ಕಟ್ಟಲು ರಾಜ್ಯ ಸರ್ಕಾರ ಅನುಮತಿ ನೀಡಿಲ್ಲ ಎಂದು ಆರೋಪಿಸಿ ಎ.ಐ.ಎಮ್.ಐ.ಎಮ್ ಪಕ್ಷದ ವತಿಯಿಂದ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಹುಬ್ಬಳ್ಳಿ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಹರಿಯಾಣ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹರಿಯಾಣ ರಾಜ್ಯ ಸರ್ಕಾರ 2018 ರಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮುಸ್ಲಿಂ ಸಮುದಾಯದವರಿಗೆ ನಮಾಜ್ ಮಾಡಲು ಅವಕಾಶ ನೀಡಿತ್ತು. ಸಾರ್ವಜನಿಕ ಸ್ಥಳಗಳು ಸಾರ್ವಜನಿಕ ಬಳಕೆಗೆ ಮುಕ್ತವಾಗಿರುತ್ತದೆ. ಆದರೆ ನಿರ್ದಿಷ್ಟವಾಗಿ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಅವರ ಧಾರ್ಮಿಕ ಆಚರಣೆಗೆ ನಮಾಜ್ ಮಾಡಲು ಹರಿಯಾಣ ರಾಜ್ಯ ಬಿಜೆಪಿ ಸರ್ಕಾರ ಕಡಿವಾಣ ಹಾಕುತ್ತಿದೆ. ಹರಿಯಾಣ ರಾಜ್ಯ ಬಿಜೆಪಿ ಸರ್ಕಾರ ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ ಮುಸ್ಲಿಂ ಸಮುದಾಯದವರ ಧಾರ್ಮಿಕ ಆಚರಣೆಗೆ ಕಡಿವಾಣ ಹಾಕುತ್ತಿರುವುದು ಸಂವಿಧಾನ ವಿರೋಧಿ ನಡೆಯಾಗಿದೆ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದರು.
ಈ ಬಗ್ಗೆ ರಾಷ್ಟ್ರಪತಿಗಳು ಗಂಭೀರವಾಗಿ ಪರಿಗಣಿಸಿ ಮುಸ್ಲಿಂ ಸಮುದಾಯಕ್ಕೆ ಸಂವಿಧಾನ ಬದ್ಧ ಹಕ್ಕುಗಳನ್ನು ಕಲ್ಪಿಸಿಕೊಡಬೇಕೆಂದು ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

